ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ನಡೆದಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ನಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಾಯವಾಗಿದೆ. ಸಿಲಿಂಡರ್ ಸ್ಫೋಟದಲ್ಲಿ ಮೂವರ ದೇಹಗಳು ಛಿದ್ರ ಛಿದ್ರವಾಗಿದೆ. ಇಬ್ಬರು ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪಂಕ್ಚರ್ ಶಾಪ್ ಮಾಲೀಕ ಅಸ್ಲಮ್ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿವೆ. ಸ್ಪೋಟಗೊಂಡ ವೇಳೆ ಅಲ್ಲಿನ ಸಿಬ್ಬಂದಿಯ ಸಹಾಯಕ್ಕೆ ಬಂದ ಜನ, ಪೊಲೀಸ್ ಬರುವಷ್ಟರಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್ಗಳು ಸುಟ್ಟು ಕರಕಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಕ್ಕಪಕ್ಕದ ಮನೆಗಳಲ್ಲಿದ್ದವರಿಗೂ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳ ಕಿಟಕಿ ಗಾಜು ಪುಡಿಪುಡಿಯಾಗಿವೆ. ಸ್ಫೋಟದಿಂದ ಚಿಲ್ಲರೆ ಅಂಗಡಿ ಸಂಪೂರ್ಣ ಜಖಂ ಆಗಿದೆ. ಟೀ ಕುಡಿಯಲು ಬಂದಿದ್ದ ವ್ಯಕ್ತಿಯ ಮೃತದೇಹವೂ ಛಿದ್ರ ಛಿದ್ರವಾಗಿದೆ. ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದೆ.
ಸದ್ಯ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸುತ್ತಿದ್ದಾರೆ. ಗೋಡೌನ್ ತುಂಬಾ ಹೆಚ್ಚು ಪಟಾಕಿ ಇರುವ ಹಿನ್ನೆಲೆಯಲ್ಲಿ ಮತ್ತೆ ಸ್ಪೋಟವಾಗುವ ಸಾಧ್ಯತೆ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಫೈರ್ ಇಂಜಿನ್ ಮೂಲಕ ನೀರು ಹಾಕಲಾಗುತ್ತಿದೆ. ಸದ್ಯ ದಕ್ಷಿಣ ವಿಭಾಗದ ಡಿಸಿಪಿ ಹರಿಶ್ ಪಾಂಡೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.