


ಬೆಂಗಳೂರು: ಪೋಷಕರು ಬೈದಿದ್ದಕ್ಕೆ ಸಿಟ್ಟಾಗಿ ಮನೆ ಬಿಟ್ಟು ತೆರಳಿದ್ದ ಮಕ್ಕಳು ಪೊಲೀಸರ ಪ್ರಯತ್ನದಿಂದ ಕೊನೆಗೆ ಮರಳಿ ಮನೆ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. 13 ವರ್ಷದ ಬಾಲಕಿ, 9 ವರ್ಷದ ಬಾಲಕನನ್ನು ಪೋಷಕರು ಟ್ಯೂಷನ್ಗೆ ಹಾಕಿದ್ದರು. ಆದರೆ ಮಕ್ಕಳು ಟ್ಯೂಷನ್ಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದರು. ಮಕ್ಕಳು ಹಠ ಮಾಡಿದ್ದಕ್ಕೆ ಸಿಟ್ಟಾದ ಪೋಷಕರು ಅವರಿಗೆ ಬೈದಿದ್ದರು. ಆ ವಿಷಯಕ್ಕೆ ನೊಂದು ಫೆ.1ರ ಮಧ್ಯಾಹ್ನ 3 ಗಂಟೆಗೆ ಮಾರತ್ತಹಳ್ಳಿಯ ಅಶ್ವತ್ಥನಗರದಿಂದ ಅಕ್ಕ ಮತ್ತು ತಮ್ಮ ಮನೆ ಬಿಟ್ಟು ತೆರಳಿದ್ದಾರೆ. ಬಾಲಕಿ ಮನೆಯಿಂದ ತೆರಳುವಾಗ ಆಧಾರ್ ಕಾರ್ಡ್ ಹಿಡಿದುಕೊಂಡಿದ್ದಳು.
ಮಕ್ಕಳು ಮನೆಯಿಂದ ನಾಪತ್ತೆಯಾದ ಬೆನ್ನಲ್ಲೇ ಪೋಷಕರು ಹೆಚ್ಎಎಲ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ತಕ್ಷಣ ಅಲರ್ಟ್ ಆದ ಹೆಚ್ಎಎಲ್ ಪೊಲೀಸರು ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿಯೂ ಮಾಹಿತಿ ಹಂಚಿಕೊಂಡಿದ್ದರು. ಫೋಟೋ ನೋಡಿ ಸಾರ್ವಜನಿಕರು ಚಿತ್ರದುರ್ಗದಲ್ಲಿ ಮಕ್ಕಳು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಚಿತ್ರದುರ್ಗ ಪೊಲೀಸರು ಮಕ್ಕಳಿದ್ದ ಸ್ಥಳಕ್ಕೆ ತೆರಳಿ ಅವರನ್ನು ಠಾಣೆಗೆ ಕರೆತಂದು ಹೆಚ್ಎಎಲ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.








