






ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಶಮಂತ್ ಮಾವಿನಕೆರೆಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆರೋಪಿಗಳು ಪಾಸ್ ಪೋರ್ಟ್ ವಶಕ್ಕೆ ನೀಡುವಂತೆ ನ್ಯಾ.ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಷರತ್ತು ವಿಧಿಸಿ, ಮಧ್ಯಂತರ ಜಾಮೀನು ನೀಡಿದೆ.
ಪ್ರಕರಣದಲ್ಲಿ ತಮ್ಮನ್ನು ಬಂಧಿಸಿದ ಪೊಲೀಸರ ಕ್ರಮ ಕಾನೂನು ಬಾಹಿರವಾಗಿದ್ದು, ಕೂಡಲೆ ಬಿಡುಗಡೆ ಮಾಡಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ನಾಲ್ವರು ಆರ್ಸಿಬಿ ಸಿಬ್ಬಂದಿ ಸಲ್ಲಿಸಿದ್ದರು. ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ, ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ನ ನಿರ್ದೇಶಕ ಸುನೀಲ್ ಮ್ಯಾಥ್ಯೂ, ಡಿಎನ್ಎ ಮ್ಯಾನೇಜರ್ ಕಿರಣ್ ಕುಮಾರ್ ಮತ್ತು ಸಮಂತ್ ಮಾವಿನಕೆರೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಮಧ್ಯಂತರ ಮನವಿ ಕುರಿತ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರ ಪೀಠ್ ಮಧ್ಯಂತರ ಜಾಮೀನು ನೀಡಿದೆ.
ವಕೀಲ ಸಂದೇಶ್ ಚೌಟ: ಸಿಸಿಬಿ ಮೂಲಕ ನಿಖಿಲ್ ಸೋಸಲೆಯನ್ನು ಬಂಧಿಸಲಾಗಿದೆ. ಸಿಐಡಿಗೆ ತನಿಖೆ ಹಸ್ತಾಂತರವಾದಾಗ ಸಿಸಿಬಿಗೆ ಬಂಧಿಸುವ ಅಧಿಕಾರವಿರಲಿಲ್ಲ. ಕಾರಣಗಳನ್ನು ತಿಳಿಸದೆ ಕಾನೂನುಬಾಹಿರವಾಗಿ ಬಂಧಿಸಲಾಗಿದೆ. ಮಧ್ಯಾಹ್ನ 2.20ಕ್ಕೆ ಬಂಧನದ ಕಾರಣ ತಲುಪಿಸಲಾಗಿದೆ. ಕಬ್ಬನ್ಪಾರ್ಕ್ ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.








