


ಬೆಂಗಳೂರು: ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್ಫೀಲ್ಡ್ ಇಮ್ಮಡಿಹಳ್ಳಿ ದೇವಸ್ಥಾನದ ವೃತ್ತದ ಬಳಿ ಘಟನೆ ನಡೆದಿದೆ. ಮನೆ ಮಾಲೀಕ ಮುನಿಶಾಮಪ್ಪ ಮೊದಲು ಸಂಪಿನೊಳಗೆ ಇಳಿದಿದ್ದರು. ರಾಸಾಯನಿಕ ಬಳಕೆಯಿಂದ ಅವರಿಗೆ ಉಸಿರಾಟದ ತೊಂದರೆಯಾಗಿದೆ. ಮಾಲೀಕನನ್ನು ರಕ್ಷಿಸಲು ಹೋದ ಪ್ಲಂಬರ್ ರುದ್ರಕುಮಾರ್ ಕೂಡ (40) ಸಾವನ್ನಪ್ಪಿದ್ದಾರೆ. ಅಲ್ಲದೇ ಇವರಿಬ್ಬರನ್ನು ನೋಡಲು ಹೋದ ವಿಶ್ವನಾಥ್ (24) ಕೂಡ ಮೃತಪಟ್ಟಿದ್ದಾರೆ.
ಮೃತ ವಿಶ್ವನಾಥ್ ಡೆಲಿವರಿ ಬಾಯ್ ಕೆಲಸ ಮಾಡುತಿದ್ದರು. ಘಟನೆಯ ನಂತರ ಅರವಿಂದ್ ಎಂಬವರು 112ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ವೈಟ್ ಫೀಲ್ಡ್ ಪೊಲೀಸರು ಮೂವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಾರ್ಗ ಮಧ್ಯೆಯೇ ಮೂವರು ಸಾವನ್ನಪ್ಪಿದರ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಸದ್ಯ ಮೃತ ದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವೈಟ್ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.








