


ಬೀದರ್: ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧವನ್ನು ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಶ್ವಿನಿ(28) ಮೃತ ಮಹಿಳೆ, ಪತಿ ಕಿಶಾನ್ ಆರೋಪಿ ಎಂದು ತಿಳಿದುಬಂದಿದೆ.
ಆರೋಪಿ ಕಿಶನ್ ಮಹಾರಾಷ್ಟ್ರದ ದಾಬಾದೊಂದರಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ ಅಶ್ವಿನಿ ತನ್ನ ಮೂವರು ಮಕ್ಕಳೊಂದಿಗೆ ಮನ್ನಳ್ಳಿ ಗ್ರಾಮದಲ್ಲಿಯೇ ವಾಸವಾಗಿದ್ದಳು. ಕೆಲಸದ ನಿಮಿತ್ತ ದೂರವಿದ್ದರೂ, ಕಿಶಾನ್ ತನ್ನ ಪತ್ನಿ ಜತೆ ಶೀಲ ಶಂಕೆಯ ವಿಚಾರವಾಗಿ ಜಗಳವಾಡುತ್ತಿದ್ದ. ಆಕೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ಕಾಡುತ್ತಿತ್ತು ಎನ್ನಲಾಗಿದೆ.
ಅಶ್ವಿನಿ ತನ್ನ ಪತಿ ಶೀಲ ಶಂಕೆಯಿಂದ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂಬ ವಿಷಯವನ್ನು ಕೆಲ ದಿನಗಳ ಹಿಂದೆಯಷ್ಟೇ ತನ್ನ ತಂದೆ ಹಾಗೂ ಕುಟುಂಬಸ್ಥರಿಗೆ ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಿಶನ್ಗೆ ಬುದ್ಧಿವಾದ ಹೇಳಿದ್ದರು, ಆದರೆ, ಶನಿವಾರ ರಾತ್ರಿ ನಡೆದ ಜಗಳವು, ಮರುದಿನ ಬೆಳಿಗ್ಗೆ ವಿಕೋಪಕ್ಕೆ ಹೋದಾಗ, ಮನೆಯ ಮುಂದಿದ್ದ ಕಲ್ಲನ್ನು ತಂದು ಆಕೆಯ ತಲೆ ಮೇಲೆ ಎತ್ತಿ ಹಾಕಿದ್ದಾನೆ. ಇದರಿಂದ ಅಶ್ವಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮಂಠಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಕಿಶಾನ್ನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.








