




ಬೀದರ್: ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ನ ಪ್ರತಾಪ್ ನಗರದ ಬಳಿ ನಡೆದಿದೆ.
16 ವರ್ಷದ ಸಮೀರ್ ಸಾವನ್ನಪ್ಪಿದ ವಿದ್ಯಾರ್ಥಿ. ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ.
ಇಂದು (ಜೂ.10) ಬೆಳಗ್ಗೆ ಸ್ಕೂಲ್ಗೆ ಹೋಗಿ ನಾಲ್ಕನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವಿಷಯವನ್ನು ಪೋಷಕರಿಗೆ ಹೇಳದೇ ವಿದ್ಯಾರ್ಥಿಯ ಮೃತದೇಹವನ್ನು ಶಾಲೆಯ ಆಡಳಿತ ಮಂಡಳಿ ಬ್ರಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ. ಹೇಳದೇ ಕೇಳದೇ ಆಸ್ಪತ್ರೆಗೆ ರವಾನಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
1ನೇ ತರಗತಿಯಿಂದಲೂ ಇದೇ ಶಾಲೆಯಲ್ಲಿ ಓದುತ್ತಿದ್ದ. ಹೆಚ್ಚಿನ ಅಂಕ ತೆಗೆದುಕೊಳ್ಳಬೇಕು, ಶಾಲೆಯಲ್ಲಿ ಕಸ ಗೂಡಿಸುವ ಕೆಲಸ ಮಾಡಬೇಕು ಎಂದು ಮುಖ್ಯ ಶಿಕ್ಷಕರು ಕಿರುಕುಳ ನೀಡಿದ್ದಾರೆ , ಹೀಗಾಗಿ ಕಿರುಕುಳದಿಂದ ಬೇಸತ್ತು ಸಾವನ್ನಪ್ಪಿದ್ದಾನೆಂದು ಮೃತನ ಪೋಷಕರು ಆರೋಪ ಮಾಡಿದ್ದಾರೆ.








