




ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಬೈರತಿ ಬಸವರಾಜ್ಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಜನಪ್ರತಿನಿಧಿಗಳ ಕೋರ್ಟ್ನಲ್ಲಿ ಅರ್ಜಿ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ್ಗೆ ಪೊಲೀಸ್ ಬಲೆ ಬೀಸಿತ್ತು. ಹೀಗಾಗಿ, ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಬೈರತಿ ಬಸವರಾಜ್ ಪರ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು.
ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ನಲ್ಲಿ ಬೈರತಿ ಪಾತ್ರದ ಬಗ್ಗೆ ಯಾವುದೇ ಉಲ್ಲೇಖ ಆಗಿಲ್ಲ. ಆಸ್ತಿಯ ವಿಚಾರವಾಗಿ ದೂರು ಸಲ್ಲಿಕೆ ಮಾಡಲಾಗಿದೆ. ದೂರು ಹಾಗೂ ಎಫ್ಐಆರ್ ನಲ್ಲಿ ಬೈರತಿ ಬಸವರಾಜ್ ಪಾತ್ರ ಉಲ್ಲೇಖಿಸಿಲ್ಲ. ಹೀಗಾಗಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದರು.
ಇದೇ ವೇಳೆ, ಎಸ್ಪಿಪಿ ಜಗದೀಶ್ ವಿದೇಶಕ್ಕೆ ತೆರಳಿರುವುದರಿಂದ ವಿಚಾರಣೆ ಮುಂದೂಡಲು ಹೈಕೋರ್ಟ್ ಗೆ ಸರ್ಕಾರಿ ವಕೀಲರಿಂದ ಮನವಿ ಮಾಡಿದ್ರು. ವಾದ ಮುಂದುವರಿಸಿದ ಬೈರತಿ ಪರ ವಕೀಲ ಚೌಟ, ರಾಜಕೀಯ ಕಾರಣಕ್ಕೆ ಕೇಸ್ ನಲ್ಲಿ ಸಿಲುಕಿಸಲು ಯತ್ನಿಸಲಾಗ್ತಿದೆ. ಕೊಲೆಯಲ್ಲಿ ಯಾವುದೇ ಪಾತ್ರವಿಲ್ಲ, ಸಿಐಡಿಗೆ ವರ್ಗಾವಣೆಯಾದ ಬಳಿಕ ಬಂಧಿಸಲು ಯತ್ನಿಸಲಾಗುತ್ತಿದೆ ಅಂತಾ ಹೈಕೋರ್ಟ್ ಗೆ ಬೈರತಿ ಬಸವರಾಜು ಪರವಾಗಿ ಪ್ರಮಾಣಪತ್ರ ಸಲ್ಲಿಕೆ ಮಾಡಲಾಯಿತು.
ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಬೈರತಿ ಬಸವರಾಜ್ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ, ಅಲ್ಲದೇ, ಬಂಧನವಾದರೆ ತಕ್ಷಣ ಬಿಡುಗಡೆ ಮಾಡಬೇಕು ಎಂದಿದೆ. ಜೊತೆಗೆ ಬೈರತಿ ಬಸವರಾಜು ತನಿಖೆ ಸಹಕರಿಸಲು ಸೂಚನೆ ನೀಡಿದೆ. ಆಕ್ಷೇಪಣೆ ಸಲ್ಲಿಸಲು ಸಿಐಡಿ ಪೊಲೀಸರಿಗೆ ನೋಟಿಸ್ ನೀಡಿ ಜನವರಿ 6ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಮತ್ತೊಂದೆಡೆ, ಬಿಕ್ಲು ಶಿವ ಕೊಲೆ ಪ್ರಕರಣದಲ್ಲೇ ಎ1 ಜಗದೀಶ್ ಅಲಿಯಾಸ್ ಜಗ್ಗ ಸೇರಿ 18 ಆರೋಪಿಗಳ ಜಾಮೀನು ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿ ಆದೇಶ ನೀಡಿದೆ.








