ಮೈಸೂರು/ಊಟಿ: ಊಟಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬುಧವಾರದಂದು ಸ್ವಾಮಿಗೌಡ ತಮ್ಮ ಸ್ನೇಹಿತ ಜಗದೀಶ ಗೌಡ ಕುಟುಂಬ ಜೊತೆ ತಮಿಳುನಾಡಿನ ಊಟಿ ಪ್ರವಾಸಕ್ಕೆ ತೆರಳಿದ್ದರು. ಕಾರಿನಲ್ಲಿ ಸ್ವಾಮಿಗೌಡ, ಜಗದೀಶ್ ಗೌಡ, ಆತನ ಪತ್ನಿ ಮತ್ತು ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. ಊಟಿ ಪ್ರವಾಸ ಮುಗಿಸಿಕೊಂಡು ಮೈಸೂರಿಗೆ ತೆರಳುತ್ತಿದ್ದ ವೇಳೆ ಕೂಡೂರು ಬಳಿ ಇವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸ್ವಾಮಿಗೌಡ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸ್ವಾಮಿಗೌಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜಗದೀಶ್ ಗೌಡ ಕುಟುಂಬದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ನಡೆದ ಕೂಡಲೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸುವ ಕಾರ್ಯ ಕೈಗೊಂಡಿದ್ದರು. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.