


ಜೈಪುರ: ಬಸ್ವೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇಯಲ್ಲಿ ನಡೆದಿದೆ.
ಮಂಗಳವಾರ (ಜೂ.30)ರ ರಾತ್ರಿ 39 ಪ್ರಯಾಣಿರಿದ್ದ ಬಸ್ವೊಂದು ಹರಿದ್ವಾರದಿಂದ ಇಂದೋರ್ಗೆ ಹೊರಟಿತ್ತು. ಈ ವೇಳೆ ಕೊಲಾವಾ ಪೊಲೀಸ್ ಠಾಣೆ ವ್ಯಾಪ್ತಿಯ ದ್ವಾರಪುರ ಗ್ರಾಮದ ಬಳಿ ಬರುತ್ತಿದ್ದಂತೆ ಬಸ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ ಹಾಗೂ 15 ಜನರು ಗಾಯಗೊಂಡಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಬಸ್ಸಿನಲ್ಲಿದ್ದ ಹೆಚ್ಚಿನವರು ಮಧ್ಯಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಕೂಡಲೇ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ ಮತ್ತು ವೈದ್ಯಕೀಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಮತ್ರೆಗೆ ದಾಖಲಿಸಲಾಗಿದೆ.
ದೌಸಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ದೀಕ್ಷಿತ್ ಅವರು ಮಾಹಿತಿ ನೀಡಿದ್ದು, ಬೆಂಕಿ ಅವಘಡದಲ್ಲಿ ಐದು ಮಂದಿ ಸಜೀವ ದಹನಗೊಂಡಿದ್ದಾರೆ. ಇನ್ನಿಬ್ಬರ ತಲೆಗೆ ತೀವ್ರ ಗಾಯಗಳಾಗಿ ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಋಷಿಕೇಶದಿಂದ ಮಧ್ಯಪ್ರದೇಶದ ಇಂದೋರ್ಗೆ ಪ್ರಯಾಣಿಸುತ್ತಿದ್ದ ಈ ಬಸ್ ಅನ್ನು ಇಂದೋರ್ನ ಹ್ಯಾನ್ಸ್ ಟ್ರಾವೆಲ್ಸ್ ನಿರ್ವಹಿಸುತ್ತಿತ್ತು ಎಂದು ತಿಳಿಸಿದ್ದಾರೆ.
ಅಪಘಾತದಿಂದಾಗಿ ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇಯಲ್ಲಿ ಕೆಲ ಸಮಯ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಮತ್ತು ಅಪಘಾತದ ಸ್ಥಳವನ್ನು ತೆರವುಗೊಳಿಸಲು ಪೊಲೀಸರು ವಾಹನಗಳನ್ನು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸಲು ವ್ಯವಸ್ಥೆ ಮಾಡಿಕೊಟ್ಟಿದ್ದರು. ಇದರ ನಡುವೆ ಬಸ್ ಡಿಕ್ಕಿಯಾಗಲು ನಿಖರ ಕಾರಣ ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ.








