Tuesday, July 28, 2026
spot_imgspot_img
spot_imgspot_img

ಬೈಂದೂರು: ನಕಲಿ ವೆಬ್‌ಸೈಟ್ ಮೂಲಕ ಮೂಕಾಂಬಿಕಾ ದೇವಸ್ಥಾನದ ಭಕ್ತರಿಗೆ ವಂಚನೆ; ರಾಜಸ್ಥಾನ ಮೂಲದ ಯುವಕನ ಬಂಧನ

- Advertisement -
- Advertisement -

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಅನ್ನು ಹೋಲುವ ನಕಲಿ ಜಾಲತಾಣವನ್ನು ಸೃಷ್ಟಿಸಿ, ಮುಂಗಡ ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ಭಕ್ತರಿಂದ ಹಣ ವಸೂಲಿ ಮಾಡಿ ವಂಚಿಸುತ್ತಿದ್ದ ರಾಜಸ್ಥಾನ ಮೂಲದ ಯುವಕನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಾಜಸ್ಥಾನದ ಅಲ್ವಾರ್ ಜಿಲ್ಲೆಯ ತಿಜಾರಾ ತಾಲೂಕಿನ ಸರಿಹೇಟಾ ನಿವಾಸಿ ನಸೀರ್ ಹುಸೇನ್ (21) ಎಂದು ಗುರುತಿಸಲಾಗಿದೆ.

ಆರೋಪಿಯು ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ನಂತೆಯೇ ವಿನ್ಯಾಸಗೊಳಿಸಲಾದ ನಕಲಿ ಪೋರ್ಟಲ್ ಮೂಲಕ ಭಕ್ತರಿಗೆ ನಕಲಿ ರಸೀದಿಗಳನ್ನು ನೀಡಿ ಹಣ ಪಡೆಯುತ್ತಿದ್ದನು. ಈ ವಂಚನೆ ಜಾಲದ ಬಗ್ಗೆ ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನವೆಂಬರ್ 3 ರಂದು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 318(2), 318(4) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(ಸಿ), 66(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ದೇವಸ್ಥಾನವು ಮುಜರಾಯಿ ಇಲಾಖೆಗೆ ಒಳಪಟ್ಟಿರುವುದರಿಂದ ಮತ್ತು ಐಟಿ ಕಾಯ್ದೆಯಡಿ ಗಂಭೀರ ಅಪರಾಧವಾಗಿರುವುದರಿಂದ, ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು.

ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಮತ್ತು ಕುಂದಾಪುರ ಗ್ರಾಮಾಂತರ ವೃತ್ತ ನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ ನೇತೃತ್ವದ ತಂಡವು ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯನ್ನು ರಾಜಸ್ಥಾನದಲ್ಲಿ ಪತ್ತೆಹಚ್ಚಿ ಡಿಸೆಂಬರ್ 19 ರಂದು ಬಂಧಿಸಿದೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ್ದ ಲ್ಯಾಪ್‌ಟಾಪ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ನಸೀರ್ ಹುಸೇನ್‌ನನ್ನು ಡಿಸೆಂಬರ್ 20 ರಂದು ಬೈಂದೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಭಕ್ತರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸೇವೆಗಳು ಅಥವಾ ಕೊಠಡಿ ಕಾಯ್ದಿರಿಸುವಿಕೆಗಾಗಿ ಕೇವಲ ಅಧಿಕೃತ ವೆಬ್‌ಸೈಟ್ ಅನ್ನು ಮಾತ್ರ ಬಳಸಬೇಕು. ಇಂತಹ ನಕಲಿ ಜಾಲತಾಣಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಪೊಲೀಸರು ಭಕ್ತರಲ್ಲಿ ಮನವಿ ಮಾಡಿದ್ದಾರೆ.

- Advertisement -

Related news

error: Content is protected !!