ರಾಜ್ಯ ಸರ್ಕಾರದಿಂದ ಯಾವುದೇ ರಿಯಾಯಿತಿಯನ್ನು ಪಡೆಯದ ಖಾಸಗಿ ಸಂಸ್ಥೆಗಳೂ ಸಹ ತಮ್ಮ ಸಿ ಮತ್ತು ಡಿ ದರ್ಜೆಯ ನೌಕರಿಯನ್ನು ಕನ್ನಡಿಗರಿಗೆ ನೀಡುವಂತೆ ಆದೇಶ ಅನ್ವಯಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.
ನೆರೆಯ ರಾಜ್ಯವಾದ ಆಂಧ್ರಪ್ರದೇಶದಲ್ಲಿ ಈ ನೀತಿ ಈಗಾಗಲೇ ಜಾರಿಯಲ್ಲಿದೆ. ಕರ್ನಾಟಕದಲ್ಲಿಯೂ ಸರ್ಕಾರದಿಂದ ಯಾವುದೇ ಸವಲತ್ತುಗಳನ್ನು ಪಡೆಯದ ಖಾಸಗಿ ಸಂಸ್ಥೆಗಳ ಸಿ ಮತ್ತು ಡಿ ನೌಕರಿಯನ್ನು ಕನ್ನಡಿಗರಿಗೆ ಮೀಸಲಿಡುವ ಬಗ್ಗೆ, ಅದರ ಸಾಧ್ಯತೆ ಭಾದ್ಯತೆಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯುವ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶವನ್ನು ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿಯಮ ರೂಪಿಸಿ ಜಾರಿಗೊಳಿಸಲಾಗಿದೆ. ಕೇವಲ ಸಿ ಮತ್ತು ಡಿ ದರ್ಜೆಗೆ ಮಾತ್ರವಲ್ಲದೆ ಎ ಮತ್ತು ಬಿ ದರ್ಜೆಯ ನೌಕರಿಯಲ್ಲಿಯೂ ಕನ್ನಡಿಗರಿಗೆ ಆದ್ಯತೆ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.