ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ರಾಮನಗರ ನಗರದ ಹೊರವಲಯದ ನೇಟಸ್ ಶಾಲೆ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ
ಮೃತಪಟ್ಟ ಯುವಕ ಅಭಿಷೇಕ್ ಡಿ. ಗೌಡ (29) ಎಂದು ಗುರುತಿಸಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಅಭಿಷೇಕ್ ಅವರು ಜೆಡಿಎಸ್ ಮುಖಂಡ ದಾಸೇಗೌಡ ಅವರ ಪುತ್ರ. ಸಂಜೆ 4 ಗಂಟೆ ಸುಮಾರಿಗೆ ಮಂಡ್ಯದಿಂದ ಬೆಂಗಳೂರು ಕಡೆಗೆ ಕಾರಿನಲ್ಲಿ ವೇಗವಾಗಿ ಹೋಗುತ್ತಿದ್ದ ಅವರು ಮೇಲೇತುವೆ ಬಳಿ ನಿಯಂತ್ರಣ ಕಳೆದುಕೊಂಡು ವಿಭಜಕಕ್ಕೆ ಗುದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ವಿಭಜಕ ದಾಟಿ ಮೇಲ್ವೇತುವೆ ನಡುವಣ ಜಾಗದಿಂದ ಕೆಳಕ್ಕೆ ಬಿದ್ದು ಪಲ್ಟಿಯಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅಭಿಷೇಕ್ ಅವರನ್ನು ರಾಮನಗರದ ರಾಮಕೃಷ್ಣ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ದೇಹದ ವಿವಿಧ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಬದುಕುಳಿಯಲಿಲ್ಲ. ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.