


ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರದಲ್ಲಿ ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಕ್ರಮ ಆಗಲಿದೆ’ ಎಂದು ಭರವಸೆ ನೀಡಿದರು. ಕಳೆದ ವಾರ ರಾಜ್ಯದ ಹಲವು ನಗರಗಳ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ, ತೆಗೆದು ಕತ್ತರಿಸಿದ ಘಟನೆ ನಡೆದಿತ್ತು.
ಇದಕ್ಕೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿ ಆಡಳಿತ, ವಿಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ಕೆಲ ಸಚಿವರು ಸಂತ್ರಸ್ತ ವಿದ್ಯಾರ್ಥಿಗಳ ಮನೆಗೆ ತೆರಳಿ ನೆರವಿನ ಭರವಸೆಯನ್ನೂ ನೀಡಿದ್ದರು. ಜೊತೆಗೆ ಬ್ರಾಹ್ಮಣ ಸಮುದಾಯ ಬೀದಿಗಿಳಿದು ಹೋರಾಟ ನಡೆಸಿತ್ತು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ಆದರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದುವರೆಗೂ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಸೋಮವಾರ ಈ ಕುರಿತು ಪ್ರತಿಕ್ರಿಯಿಸಿರುವ ಅವರು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮದ ಭರವಸೆ ನೀಡಿದ್ದಾರೆ.