- Advertisement -
- Advertisement -





ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಬಳಿ ಚಿರತೆ ದಾಳಿಗೆ 10 ವರ್ಷದ ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ರವಿವಾರ ಬೆಳಗ್ಗೆ ನಡೆದಿದೆ.
ಬೆಂಗಳೂರು ಮೂಲದ ಹರ್ಷಿತ್(10) ಚಿರತೆ ದಾಳಿಗೆ ಬಲಿಯಾದ ಬಾಲಕ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಸಮೀಪದ ನಾಗಮಲೆಯ ಬಳಿ ಘಟನೆ ನಡೆದಿದೆ.
ಕುಟುಂಬಸ್ಥರ ಜೊತೆ ಮಲೆ ಮಹದೇಶ್ವರ ಬೆಟ್ಟ ದೇವಾಲಯಕ್ಕೆ ಆಗಮಿಸಿದ್ದ ಬಾಲಕ ಹರ್ಷಿತ್ ರವಿವಾರ ಬೆಳಗ್ಗೆ ನಾಗಮಲೆಗೆ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಹಠಾತ್ ಎರಗಿದ ಚಿರತೆ ದಾಳಿ ನಡೆಸಿ ಹರ್ಷಿತ್ ನನ್ನು ಎಳೆದೊಯ್ದಿದೆ.
ಸುಮಾರು ಅರ್ಧ ತಾಸು ಹುಡುಕಾಟದ ಬಳಿಕ ಹರ್ಷಿತ್ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಮಲೆಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗುತ್ತಿದೆ. ಚಿರತೆ ದಾಳಿಯಿಂದ ಮೃತಪಟ್ಟ ಬಾಲಕನ ಕುಟುಂಬಸ್ಥರು ಮತ್ತು ಪೋಷಕರ ಆಕ್ರಂದನ ಮುಗಿಲು ಮುಟ್ಟುವಂತಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








