



ಚಾಮರಾಜನಗರ: ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಒಬ್ಬರು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಪೊನ್ನಾಚಿ ಅರಣ್ಯ ವಲಯದ ಹುಣಸೇಬಯಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮಲೆಮಹದೇಶ್ವರ ಬೆಟ್ಟದ ಹುಲಿಗೂಡು ಗ್ರಾಮದ ಮಹದೇವಸ್ವಾಮಿ(48) ಮೃತಪಟ್ಟವರು. ಅವರು ಮಲೆಮಹದೇಶ್ವರ ಅರಣ್ಯ ವ್ಯಾಪ್ತಿಯಲ್ಲಿ ಫಾರೆಸ್ಟ್ ವಾಚರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ರಾತ್ರಿ ಹುಣಸೇಬಯಲು ಅರಣ್ಯ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಹದೇವಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಮಲೆಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ಘಟನೆಗೆ ಸಂಬಂಧಿಸಿದಂತೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.







