



ಚನ್ನಪಟ್ಟಣ: ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟದ ನಡುವೆ ಕಾಂಗ್ರೆಸ್ ಸಿಪಿ ಯೋಗೇಶ್ವರ್ರನ್ನು ಪಕ್ಷಕ್ಕೆ ಸೆಳೆದು ಬಳಿಕ ಅವರನ್ನು ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ.
ಇಂದು ಕಾಂಗ್ರೆಸ್ ನಾಯಕರ ಬೆಂಬಲದೊಂದಿಗೆ ಚನ್ನಪಟ್ಟಣ ತಹಶೀಲ್ದಾರ್ರವರ ಕಚೇರಿಯಲ್ಲಿ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರು ಸಿ.ಪಿ.ಯೋಗೇಶ್ವರನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತಮ್ಮ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ್ರವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಎರಡು ಬಾರಿ ಶಾಸಕರಾಗಿದ್ದರು. ಬಿಜೆಪಿ ಹಾಗೂ ಎನ್ಡಿಎ ನಿಂದ ಅವರಿಗೆ ಅನ್ಯಾಯವಾದ ಕಾರಣ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನೊಪ್ಪಿ ಮರಳಿ ಬಂದಿರುವ ಯೋಗೇಶ್ವರನ್ನು ಇಡೀ ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ.
ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ. ಜೆಡಿಎಸ್ ಬಿಜೆಪಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನೇ ನಿಲ್ಲಿಸಿದರೂ ಕೂಡ, ಕಾಂಗ್ರೆಸ್ನ ಅಭ್ಯರ್ಥಿಯೇ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ನುಡಿದಂತೆ ನಡೆಯುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದರು.