ಮಂಗಳೂರು : ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿ ಚಾರ್ಮಾಡಿ ಘಾಟ್ನಲ್ಲಿ ಭೂಕುಸಿತ ಉಂಟಾಗಿತ್ತು. ಸದ್ಯ ಮಣ್ಣು ತೆರವುಗೊಳಿಸಲಾಗಿದ್ದು, ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ರಾ.ಹೆ. 73ರ ಮಂಗಳೂರು-ವಿಲ್ಲುಪುರ0 ರಸ್ತೆಯ 76 ಕಿ.ಮೀ.ನಿಂದ 86.200 ವರೆಗೆ ಬರುವ ಜಿಲ್ಲಾ ವ್ಯಾಪ್ತಿಯ ಪ್ರದೇಶದಲ್ಲಿ ವಿವಿಧೆಡೆ ಭೂಕುಸಿತ ಉಂಟಾಗಿದ್ದವು. ಈ ಹಿನ್ನೆಲೆಯಲ್ಲಿ ಆ.7ರಿಂದ ಆ.11ರ ರಾತ್ರಿ 12 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿತ್ತು.
ಭೂಕುಸಿತ ಭಾಗಗಳನ್ನು ತೆರವುಗೊಳಿಸಿದ್ದು, ಸಂಪರ್ಕಕ್ಕೆ ಅನುವು ಮಾಡಿಕೊಡಲಾಗಿದೆ. ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಎಲ್ಲ ರೀತಿಯ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿದೆ. ಸಂಜೆ 7ರಿಂದ ಬೆಳಗ್ಗೆ 7ಗಂಟೆವರೆಗೆ ಲಘು ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಅಲ್ಲದೆ ಆ.7ರಂದು ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿರುವ ಅಂಶವು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.