ಬೆಂಗಳೂರು: ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, 2ನೇ ಅಲೆಯ ಆತಂಕ ದಟ್ಟವಾಗಿ ಕಾಡುತ್ತಿದೆ. ಜನರು ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ತಪ್ಪಿದ್ದಲ್ಲ. ಹಾಗಾಗಿ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗುವ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸುಳಿವು ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು. ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲೂ ಕರೊನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದೆ.
ಮುಂಜಾಗ್ರತಾ ಕ್ರಮದೊಂದಿಗೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಜರುಗಿಸಬೇಕಾದೀತು ಎಂದು ಸ್ವತಃ ಮುಖ್ಯಮಂತ್ರಿಗಳೇ ನಾಗರಿಕರಿಗೆ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ ಎಂದು ವಿವರಿಸಿದರು.
ಇಂದಿನಿಂದ ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಇದುವರೆಗೂ 15 ಲಕ್ಷ ಜನರಿಗೆ ಲಸಿಕೆ ನೀಡಿದ್ದೇವೆ. ಪ್ರತಿದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ ವ್ಯಕ್ತಿಗೆ 20 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮಾಡಬೇಕು ಎಂದು ಸಚಿವ ಸುಧಾಕರ್ ಹೇಳಿದರು.