- Advertisement -
- Advertisement -




ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಟೋಲ್ ಪ್ಲಾಜಾ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಅಂದಾಜು ಮೂರು ವರ್ಷದ ಗಂಡು ಚಿರತೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. ಹೊಸಪೇಟೆ ಪ್ರಾದೇಶಿಕ ಅರಣ್ಯ ವಲಯದ ಚಿಲಕನಹಟ್ಟಿ ಶಾಖೆಯ ಸಿಬ್ಬಂದಿ ಗಸ್ತು ವೇಳೆ ಈ ಘಟನೆ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಪ್ರಾದೇಶಿಕ ಅರಣ್ಯ ವಲಯ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರಡಿ ಪ್ರಕರಣ ದಾಖಲಿಸಲಾಗಿದೆ. ಚಿರತೆಯ ಸಾವಿನ ನಿಖರ ಕಾರಣ ತಿಳಿದುಕೊಳ್ಳಲು ಪಶುವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆಸಿ ವರದಿ ಪಡೆಯಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಂತರ ಮೃತ ಚಿರತೆಯನ್ನು ಕಾನೂನುಬದ್ಧ ಕ್ರಮದಂತೆ ಅರಣ್ಯ ಪ್ರದೇಶದಲ್ಲಿ ವಿಲೇವಾರಿ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ. ಭಾಸ್ಕರ್ ಹಾಗೂ ವಲಯ ಅರಣ್ಯಾಧಿಕಾರಿ ಕೌಶಿಕ್ ದಳವಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- Advertisement -








