ಬೆಳ್ತಂಗಡಿ: 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿ ಪ್ರದೇಶದಲ್ಲಿ ಅಂದಾಜು ₹50,000 ಮೌಲ್ಯದ 1.500 ಕಿಲೋಗ್ರಾಂ ನಿಷೇಧಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಟಿ.ಇ. ಜೋಸೆಫ್ (42), ಚಾರ್ಮಾಡಿ ನಿವಾಸಿ, ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಈ ಪ್ರಕರಣವು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್.ಡಿ.ಪಿ.ಎಸ್. ಕಾಯ್ದೆಯ ಸೆಕ್ಷನ್ 8(c) ಜೊತೆಗೆ 20(b) ಅಡಿಯಲ್ಲಿ ದಾಖಲಾಗಿತ್ತು.ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಬಸವರಾಜ್ ಅವರು 10-04-2026ರಂದು ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿದರು. ಬಳಿಕ 16-04-2026ರಂದು ಶಿಕ್ಷೆ ಪ್ರಕಟಿಸಲಾಯಿತು.
ಶಿಕ್ಷೆಯ ವಿವರ:
ಎನ್.ಡಿ.ಪಿ.ಎಸ್. ಕಾಯ್ದೆಯ ಸೆಕ್ಷನ್ 8(c) r/w 20(b)(ii)(B) ಅಡಿಯಲ್ಲಿ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಲಾಗಿದೆ.ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 2 ತಿಂಗಳ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗಿದೆ. ಸೆಕ್ಷನ್ 32-B(f) ಅಡಿಯಲ್ಲಿ ಇನ್ನೂ 1 ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.ಪ್ರಕರಣದ ತನಿಖೆಯನ್ನು ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣೆಯ ಆಗಿನ ಪೊಲೀಸ್ ಉಪನಿರೀಕ್ಷಕರಾದ ಬಿ.ಜಿ. ಸುಬ್ಬಾಪುರ್ ಮಠ್ ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದರು.








