


ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಹಾಗೂ ನಕಲಿ ದಾಖಲೆಗಳ ಬಳಕೆ ಸೇರಿದಂತೆ ಹಲವು ಆರೋಪಗಳ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಕುಟ್ಟಿಂಚಾಲ್ನ ತರಂಪಲ್ಲಿ ಮನೆ ನಿವಾಸಿ ಪ್ರಿನ್ಸ್ ಟಿ.ಜೆ. ಜೋಶ್ (43) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ.90/2016ರಲ್ಲಿ ಐಪಿಸಿ ಕಲಂ 465, 468, 471, 420, 379 ಹಾಗೂ 34ರಡಿ ಪ್ರಕರಣ ದಾಖಲಾಗಿದ್ದು, ನಂತರ ನ್ಯಾಯಾಲಯದಲ್ಲಿ ಸಿ.ಸಿ. ನಂ.1060/2019 ಆಗಿ ವಿಚಾರಣೆ ನಡೆಯುತ್ತಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ನ್ಯಾಯಾಲಯದಿಂದ ಜಾರಿಗೊಂಡಿದ್ದ ವಾರಂಟ್ ಹಿನ್ನೆಲೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.ಪೊಲೀಸರ ವಿಶೇಷ ಕಾರ್ಯಾಚರಣೆಯ ಮೂಲಕ ಆರೋಪಿ ಪ್ರಿನ್ಸ್ ಟಿ.ಜೆ. ಜೋಶ್ ಅನ್ನು ದಿನಾಂಕ 13-03-2026 ರಂದು ಕೇರಳ ರಾಜ್ಯದ ಕುಟ್ಟಂಪುಝ ಪ್ರದೇಶದಲ್ಲಿ ಬಂಧಿಸಿ, ಬಳಿಕ ಮಾನ್ಯ ACJ & JMFC ನ್ಯಾಯಾಲಯ, ಬಂಟ್ವಾಳ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಕಾರ್ಯಾಚರಣೆ ಬಂಟ್ವಾಳ ಎಎಸ್ಪಿ ಯಶ್ ಕುಮಾರ್ ಶರ್ಮಾ ಐಪಿಎಸ್ ಅವರ ನಿರ್ದೇಶನದಂತೆ, ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕ ಕೃಷ್ಣಕಾಂತ್ ಕೆ ಹಾಗೂ ಸಿಬ್ಬಂದಿಗಳಾದ ಹೆಚ್ಸಿ 314 ಸಂತೋಷ್, ಪಿಸಿ 2462 ಶಿವಾನಂದ ಮಡ್ಡಿ ಅವರ ತಂಡದಿಂದ ಯಶಸ್ವಿಯಾಗಿ ನೆರವೇರಿತು.







