ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರುವ ಅಗತ್ಯವಿದೆ ಎಂದಿರುವ ಕಂದಾಯ ಸಚಿವ ಆರ್ ಅಶೋಕ್, ರಾಜ್ಯದಲ್ಲಿ ಎಲ್ಲ ಕಡೆಯೂ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಎಲ್ಲಿಯೂ ಜಾತ್ರೆ ನಡೆಸಬಾರದು. ಜಾತ್ರೆ ನಡೆದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ವಾರ್ನ್ ಮಾಡಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ. ಸುಧಾಕರ್ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಅವರು ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಕೊರೊನಾ ಸ್ಥಿತಿಗತಿ ಕುರಿತು ಚರ್ಚೆ ನಡೆಸಿದರು.
ಆನಂತರ ಮಾತನಾಡಿದ ಸಚಿವ ಅಶೋಕ್, “ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಜಾತ್ರೆ ನಡೆಯುವಂತಿಲ್ಲ. ಮದುವೆ ಸಮಾರಂಭ ನಡೆಸಲು ಕಡ್ಡಾಯವಾಗಿ ಪಾಸ್ ತೆಗೆದುಕೊಳ್ಳಬೇಕು. ಒಳಾಂಗಣದಲ್ಲಿ 100 ಹಾಗೂ ಹೊರಾಂಗಣದಲ್ಲಿ 200ಕ್ಕಿಂತ ಹೆಚ್ಚು ಜನ ಸೇರಿದರೆ ಕಲ್ಯಾಣ ಮಂಟಪ ಮುಚ್ಚಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.
ರಾಜ್ಯದ ಎಲ್ಲಿಯೂ ಆಮ್ಲಜನಕದ ಸಮಸ್ಯೆ ಆಗಬಾರದು. ಕಳೆದ ಬಾರಿಗಿಂತ ಈ ಬಾರಿ ಪ್ರಕರಣಗಳು ಹೆಚ್ಚಾಗಬಹುದು. ಹೀಗಾಗಿ ಯಾವುದೇ ಸಮಸ್ಯೆ ಆಗಬಾರದು. ಸಿಬ್ಬಂದಿಗೆ ಸಂಬಳದಲ್ಲಿಯೂ ತೊಂದರೆ ಎದುರಾಗಬಾರದು ಎಂದಿದ್ದಾರೆ. ಶವ ಸಂಸ್ಕಾರ ಮಾಡುವಲ್ಲಿ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.