ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಮಾಜಿ ಸಂಸದ ಡಿ.ಕೆ ಸುರೇಶ್, ರಾಹುಲ್ ಗಾಂಧಿ ಅವರಿಗೆ 50 ಸಾವಿರ ರೂ. ಮೌಲ್ಯದ ಪ್ರಾಪರ್ಟಿ ಶ್ಯೂರಿಟಿ ನೀಡಿದ್ದು, ಜಾಮೀನು ಮಂಜೂರು ಮಾಡಲಾಗಿದೆ. ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿ ಅವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು. ಇಂದು ಕೋರ್ಟ್ಗೆ ಹಾಜರಾದ ಹಿನ್ನೆಲೆ ಜಾಮೀನು ಮಂಜೂರು ಮಾಡಿದೆ.
ಜೂನ್ 1ರಂದು ವಿಚಾರಣೆಯ ಸಂದರ್ಭದಲ್ಲಿ ರಾಹುಲ್ ಪರ ವಕೀಲರು ಐಎನ್ಡಿಐಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿದ್ದರಿಂದ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯವು ಮನವಿ ನಿರಾಕರಿಸಿತ್ತು. ಮಧ್ಯಾಹ್ನದ ವಿಚಾರಣೆ ಮುಂದೂಡಿ ನಂತರ ಜೂನ್ 7 ರಂದು ಖುದ್ದು ಹಾಜರಾಗಬೇಕೆಂದು ಸೂಚಿಸಿತ್ತು.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಕಾಂಗ್ರೆಸ್ ಪಕ್ಷದ ಜಾಹೀರಾತುಗಳು ಮತ್ತು ಪ್ರಚಾರದ ಘೋಷಣೆಗಳನ್ನು ವಿರೋಧಿಸಿ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕ ಕೇಶವ ಪ್ರಸಾದ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಬಿಜೆಪಿಯು ಸಾರ್ವಜನಿಕ ಕಾಮಗಾರಿಗಳ ನಿರ್ವಹಣೆಗಾಗಿ ಗುತ್ತಿಗೆದಾರರು ಮತ್ತು ಇತರರಿಂದ 40% ಕಮಿಷನ್ ಮಾಡುತ್ತಿದೆ ಎಂದು ಜಾಹೀರಾತುಗಳಲ್ಲಿ ಕಾಂಗ್ರೆಸ್ ಪಕ್ಷವು ಆರೋಪಿಸಿತ್ತು. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ತನ್ನ ಪಕ್ಷದ ಸದಸ್ಯರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ನಾಯಕರು ಸುಳ್ಳು ಜಾಹೀರಾತನ್ನು ಪ್ರಕಟಿಸಿದೆ ಎಂದು ಬಿಜೆಪಿ ತನ್ನ ದೂರಿನಲ್ಲಿ ಆರೋಪಿಸಿತ್ತು.