ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಇಳಿಕೆಯಾದ ಹಿನ್ನೆಲೆಯಲ್ಲಿ ಇಂದಿನಿಂದ ಉನ್ನತ ಶಿಕ್ಷಣ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗಲಿದೆ.
ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್ ಕಾಲೇಜುಗಳು ನಾಲ್ಕು ತಿಂಗಳ ಬಳಿಕ ಆರಂಭವಾಗಲಿದೆ. ಆದರೆ ಕಾಲೇಜಿಗೆ ವಿದ್ಯಾರ್ಥಿಗಳ ಹಾಜರಿ ಕಡ್ಡಾಯವಲ್ಲ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಿಸಿಎಂ ಅಶ್ವತ್ಥ್ ನಾರಾಯಣ ಸೂಚಿಸಿದ್ದಾರೆ.
ಉಳಿದಂತೆ ಕಾಲೇಜಿಗೆ ಹಾಜರಾಗುವ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊದಲ ಡೋಸ್ ಸಲಿಕೆ ಪಡೆಯುವುದು ಕಡ್ಡಾಯ ಮಾಡಲಾಗಿದೆ. ಕಾಲೇಜ್ ಎಂಟ್ರಿಯಲ್ಲೇ ವಿದ್ಯಾರ್ಥಿಗಳ ಲಸಿಕಾ ಪ್ರಮಾಣಪತ್ರ ಪರಿಶೀಲಿಸಿ ಪ್ರವೇಶ ನೀಡಲಾಗುತ್ತದೆ. ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿರಬೇಕು. ನಿತ್ಯವೂ ತರಗತಿ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ಈಗಾಗಲೇ ಶೇ.74 ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ಸಿಗುವಂತೆ ಕ್ರಮ ವಹಿಸಬೇಕು.
ಇಚ್ಛೆ ಇದ್ದರೆ ಮಾತ್ರ ಭೌತಿಕ ತರಗತಿಗಳಿಗೆ ಹಾಜರಾಗಬಹುದು. ಇಲ್ಲವೇ ಆನ್ಲೈನ್ ಮೂಲಕವೂ ಹಾಜರಾಗಬಹುದು. ಆದರೆ, ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದು ಸೂಚಿಸಲಾಗಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈಗಾಗಲೇ ಬಹುತೇಕ ಕಾಲೇಜು ಆಡಳಿತ ಮಂಡಳಿಗಳು ಕಾಲೇಜು ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿ ಸಿದ್ಧವಾಗಿದೆ.