200ಕ್ಕೂ ಹೆಚ್ಚು ಟಿನ್ ಶೆಡ್ಗಳು ಭಸ್ಮ






ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಸುಟ್ಟು ಕರಕಲಾಗಿರುವ ಘಟನೆ ದೆಹಲಿಯ ಉದ್ಯೋಗ ಭವನದ ಬಳಿ ನಡೆದಿದೆ.
ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ವಿದ್ಯುತ್ ಪ್ಯಾನೆಲ್ನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಲಭಿಸಿದ್ದು, ಬಳಿಕ ಬೆಂಕಿ ವೇಗವಾಗಿ ಹಬ್ಬಿ ಕಾರ್ಮಿಕರ ತಾತ್ಕಾಲಿಕ ವಸತಿ ಶೆಡ್ಗಳನ್ನು ಆವರಿಸಿತು. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ 20 ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯೋಗ ಭವನದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸೆಂಟ್ರಲ್ ವಿಸ್ಟಾ ಪುನರ್ಅಭಿವೃದ್ಧಿ ಯೋಜನೆಯಡಿ ಧ್ವಂಸ ಕಾರ್ಯ ನಡೆಯುತ್ತಿರುವ ಸಂದರ್ಭದಲ್ಲೇ ಈ ಅಗ್ನಿ ಅವಘಡ ಸಂಭವಿಸಿದೆ. 1950ರ ದಶಕದ ಕೊನೆಯಲ್ಲಿ ನಿರ್ಮಾಣಗೊಂಡಿದ್ದ ಉದ್ಯೋಗ ಭವನವನ್ನು ಇತ್ತೀಚೆಗೆ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಅಡುಗೆಗೆ ಬಳಸುವ ಸಣ್ಣ ಸಿಲಿಂಡರ್ಗಳಿದ್ದ ಹಿನ್ನೆಲೆ ಬೆಂಕಿಯ ಕೆನ್ನಾಲಿಗೆ ವ್ಯಾಪಕವಾಗಿ ಹಬ್ಬಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದ ಉಂಟಾದ ನಷ್ಟದ ಪ್ರಮಾಣ ಇನ್ನೂ ಸ್ಪಷ್ಟವಾಗಿಲ್ಲ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ವಿದ್ಯುತ್ ಪ್ಯಾನೆಲ್ನಲ್ಲಿ ಕಾಣಿಸಿಕೊಂಡ ಬೆಂಕಿಯೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.








