


ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆ ನಾಗರಕೊಪ್ಪದಲ್ಲಿ ನಡೆದಿದೆ.
ಗೃಹಿಣಿ ಸುಮಂಗಲಾ ತಿಪ್ಪಣ್ಣವರ್ ಮೃತಪಟ್ಟವರು. ಗಂಡನ ಮನೆಯಲ್ಲಿ ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ ಎಂದು ಪತಿ ಕುಟುಂಬಸ್ಥರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ 5 ವರ್ಷಗಳ ಹಿಂದೆ ಪ್ರವೀಣ್ ತಿಪ್ಪಣ್ಣವರ್ ಎಂಬವರಿಗೆ ಸುಮಂಗಲಾ ಕೊಟ್ಟು ಮದುವೆ ಮಾಡಲಾಗಿತ್ತು. ಮದುವೆ ಮಾಡಿಕೊಟ್ಟರೂ ಗಂಡನ ಮನೆಯವರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿತ್ತು.
ಸುಮಂಗಲಾ ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ. ಸುಮಂಗಲಾ ಸಾವಿನ ಬೆನ್ನಲ್ಲೇ ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಪರಾರಿಯಾಗಿದ್ದಾರೆ. ಈ ಕುರಿತು ಪತಿ ಪ್ರವೀಣ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.








