

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಜೈಲಿನಲ್ಲಿ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಸಂಬಂಧಿತ ಎಲ್ಲಾ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವು ನವೆಂಬರ್ 24ರಂದು 12 ಷರತ್ತುಗಳೊಂದಿಗೆ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದ್ದರೂ, ಬಾಂಡ್ ಮತ್ತು ಜಾಮೀನುದಾರರ ಕೊರತೆಯಿಂದಾಗಿ ಇದುವರೆಗೆ ಬಿಡುಗಡೆ ಸಾಧ್ಯವಾಗಿರಲಿಲ್ಲ.

ಡಿ. 17ರಂದು ಆರೋಪಿ ಚಿನ್ನಯ್ಯನ ಪತ್ನಿ ಮಲ್ಲಿಕಾ ಅವರು ಬೆಳ್ತಂಗಡಿ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯಕ್ಕೆ ಹಾಜರಾಗಿ ಒಂದು ಲಕ್ಷ ರೂಪಾಯಿ ಮೊತ್ತದ ಜಾಮೀನು ಬಾಂಡ್ ಸಲ್ಲಿಸಿದ್ದು, ಜೊತೆಗೆ ಇಬ್ಬರು ಜಾಮೀನುದಾರರನ್ನು ಹಾಜರುಪಡಿಸಿ ಕಾನೂನು ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಬಳಿಕ ಅವರು ಬಿಡುಗಡೆ ಪ್ರಕ್ರಿಯೆಗಾಗಿ ಶಿವಮೊಗ್ಗ ಜೈಲಿನತ್ತ ತೆರಳಿದ್ದಾರೆ.



ಬೆಳ್ತಂಗಡಿ ನ್ಯಾಯಾಲಯದಿಂದ ಬಿಡುಗಡೆ ಆದೇಶ ಪತ್ರವನ್ನು ಇ-ಮೇಲ್ ಮೂಲಕ ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿದೆ. ಆದೇಶ ಜೈಲಿಗೆ ತಲುಪಿದ ನಂತರ ಆರೋಪಿ ಚಿನ್ನಯ್ಯನನ್ನು ಇಂದು ಸಂಜೆ ವೇಳೆಗೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.








