ಬೆಳ್ತಂಗಡಿ: ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆಯಾದ ಹಿನ್ನೆಲೆ ಭಾರೀ ಸಂಖ್ಯೆಯಲ್ಲಿ ಜನರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುತ್ತಿದ್ದು ಇದರಿಂದ ಸ್ಥಳೀಯರಲ್ಲಿ ಆತಂಕಕ್ಕೆ ಉಂಟಾಗಿದೆ. ಶ್ರೀ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲದಿದ್ದರೂ ಕಳೆದ ಎರಡು ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಬರುತ್ತಿದ್ದು ನೇತ್ರಾವತಿ ಸ್ನಾನಘಟ್ಟದಲ್ಲಿ ಜನದಟ್ಟಣೆ ಕಾಣಿಸಿದೆ. ಅದಲ್ಲದೆ ಮಾಸ್ಕ್ ಹಾಗೂ ಸುರಕ್ಷಿತ ಅಂತರ ಇಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ನೂರಾರು ಸಂಖ್ಯೆಯಲ್ಲಿ ವಾಹನಗಳು ಜಿಲ್ಲಾ ಗಡಿಯನ್ನು ದಾಟಿ ಬರಲು ಹೇಗೆ ಸಾಧ್ಯವಾಯಿತು, ಜಿಲ್ಲಾ ಗಡಿಯಲ್ಲಿ ಯಾಕೆ ವಾಹನ ತಪಾಸಣೆ ನಡೆಸುತ್ತಿಲ್ಲ? ಸರಕಾರದ ಕಟ್ಟುನಿಟ್ಟಿನ ಕ್ರಮಗಳು ಕೇವಲ ಹಳ್ಳಿಯ ಜನರಿಗೆ ಮಾತ್ರವೇ ಹೊರಗಿನಿಂದ ಬರುವವರಿಗೆ ಯಾಕೆ ಜಿಲ್ಲಾಡಳಿತ ಅವಕಾಶ ನೀಡುತ್ತಿದೆ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.
ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಲಾಕ್ಡೌನ್ ತೆರವುಗೊಂಡಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 21ರ ವರೆಗೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಭಕ್ತಾದಿಗಳು ಅವಧಿ ಮುಗಿದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಧ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ. ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರ ಕಾರ್ಯದರ್ಶಿ ತಿಳಿಸಿದ್ದಾರೆ.