



ಬಾಗಲಕೋಟೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20) ಮತ್ತು ಪ್ರಜ್ವಲ್ (17) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ.
ಸಿದ್ದಾಪುರ ಗ್ರಾಮದಿಂದ ನಾಲ್ವರು ಸ್ನೇಹಿತರು ತಡರಾತ್ರಿ ಶಿರೋಳ ಕಾಡಸಿದ್ಧೇಶ್ವರ ದೇವರ ಜಾತ್ರೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಸಿದ್ದಾಪುರ ಬಳಿರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರ್ಯಾಕ್ಟರ್ ಕಾರ್ಖಾನೆ ಬಳಿ ನಿಂತಿತ್ತು. ಈ ಟ್ರ್ಯಾಕ್ಟರ್ಗೆ ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಕಾರು ಭಾಗಶಃ ಟ್ರ್ಯಾಕ್ಟರ್ ನ ಒಳಗೆ ನುಗ್ಗಿದ್ದು, ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.








