ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ ಜಾರ್ಜ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಡಿವೈಎಸ್ಪಿ ಗಣಪತಿ ಕುಟುಂಬಸ್ಥರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಮಾಜಿ ಸಚಿವ ಕೆ.ಜೆ ಜಾರ್ಜ್ ಬಗ್ಗೆ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿರುವ ಬಗ್ಗೆ ಪ್ರಶ್ನೆ ಮಾಡಿ ಗಣಪತಿ ಕುಟುಂಬಸ್ಥರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತನಿಖೆಯೇ ನಡೆಸದೆ ಬಿ ರಿಪೋರ್ಟ್ ನೀಡಿದ್ದಾರೆಂದು ಅರ್ಜಿ ಸಲ್ಲಿಸಿದ್ದಾರೆ.
2016 ಜುಲೈ 17 ರಂದು ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಮಾಜಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಇನ್ನಿಬ್ಬರು ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ.ಎಂ. ಪ್ರಸಾದ್ ಕಾರಣವೆಂದು ಆರೋಪಿಸಲಾಗಿತ್ತು. ಪ್ರಕರಣದ ಸೂಕ್ತ ತನಿಖೆ ನಡೆಸುವಂತೆ ಗಣಪತಿ ಕುಟುಂಬಸ್ಥರು ಆಗ್ರಹಿಸಿದ್ದರು.
ತನಿಖೆ ನಡೆಸಿದ ಸಿಬಿಐ ಈ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಬಿಐ ವರದಿ ತಿರಸ್ಕರಿಸಿ, ವಿಚಾರಣೆಗೆ ಹಾಜರಾಗುವಂತೆ ಜಾರ್ಜ್ ಹಾಗೂ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸ್ ಪ್ರಶ್ನಿಸಿ ಜಾರ್ಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸಿಬಿಐ ನೀಡಿದ್ದ ಬಿ ರಿಪೋರ್ಟ್ ವರದಿಯನ್ನು ಮಾನ್ಯ ಮಾಡಿತ್ತು. ಸದ್ಯ ಈ ಆದೇಶ ಪ್ರಶ್ನಿಸಿ ಡಿವೈಎಸ್ಪಿ ಗಣಪತಿ ಕುಟುಂಬಸ್ಥರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.