ವಿಟ್ಲ: ರಾಜ್ಯಾದ್ಯಂತ ಗಾಂಜಾ ಸಾಗಾಟ ಪ್ರಕರಣ ಹೆಚ್ಚಾಗುತ್ತಿರುವುದು ನೋಡಿದ್ದೇವೆ. ಆದರೆ ಇಲ್ಲೊಬ್ಬ ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ನೇತೃತ್ವದಲ್ಲಿ ವಿಟ್ಲ ಠಾಣೆಯ ಪೊಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಉಕ್ಕುಡ ಕಾನತ್ತಡ್ಕದಲ್ಲಿ ನಡೆದಿದೆ. ಸುಮಾರು 80 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (೨೫) ಬಂಧಿತ ಆರೋಪಿಯಾಗಿದ್ದಾನೆ.
ಅಕ್ರಮವಾಗಿ ಮಾದಕ ವಸ್ತುಗಳನ್ನು ಸಂಗ್ರಹ ಮಾಡಿ ಮಾರಾಟ ಮಾಡುವ ಮಾಹಿತಿ ಹಿನ್ನಲೆಯಲ್ಲಿ ವೃತ್ತ ನಿರೀಕ್ಷಕರ ಅಪರಾಧ ಪತ್ತೆ ದಳ ಹಾಗೂ ವಿಟ್ಲ ಠಾಣೆಯ ಸಿಬ್ಬಂದಿಗಳ ಜತೆಗೆ ದಾಳಿ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಈತ ಅನುಮಾನಾಸ್ಪದವಾಗಿ ವರ್ತಿಸಿದ್ದರಿಂದ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಗಾಂಜಾ ಎಣ್ಣೆ (ಹ್ಯಾಶಿಶ್ ಆಯಿಲ್) ತಯಾರಿಸಿ ಮಾರಾಟ ಮಾಡುವ ಬಗ್ಗೆ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.
ಆತನಿಂದ ಸುಮಾರು ೩೦೦ ಗ್ರಾಂ ತೂಕದ ಗಾಂಜಾ ಎಣ್ಣೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜತೆಗೆ ೪೦ ಗ್ರಾಂ ಮೊಗ್ಗು ಕಾಯಿ ಮಿಶ್ರಿತ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್ ಮಾರ್ಗದರ್ಶನದಲ್ಲಿ ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟನ್ ಡಿಸೋಜ್ ನಿರ್ದೇಶನದಂತೆ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರನ್ನೊಳಗೊಂಡ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ಎಸ್. ಕೆ., ಬಂಟ್ವಾಳ ಸಂಚಾರಿ ಠಾಣೆಯ ಉಪನಿರೀಕ್ಷಕ ರಾಜೇಶ್ ಕೆ. ವಿ., ವಿಟ್ಲ ಪ್ರೊಬೆಷನರಿ ಉಪನಿರೀಕ್ಷಕ ಕೃಷ್ಣಕಾಂತ್, ಸಿಬ್ಬಂದಿಗಳಾದ ಗೋಣಿಬಸಪ್ಪ, ಕುಮಾರ್, ವಿವೇಕ್, ವಿಟ್ಲ ಸಿಬ್ಬಂದಿಗಳಾದ ಕೆ. ಟಿ. ಜಯರಾಮ, ಪ್ರಸನ್ನ, ಲೋಕೇಶ್, ಪ್ರತಾಪ, ವಿನಾಯಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.