ಬೆಂಗಳೂರು: ಮುಖ್ಯಮಂತ್ರಿ ಕಚೇರಿಯ ಹೆಸರಿನಲ್ಲಿ ನಕಲಿ ವರ್ಗಾವಣೆ ಟಿಪ್ಪಣಿ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಆರೋಪದ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ(ಆಡಳಿತ) ಅರುಣ್ ಫುರ್ಟಾಡೋ ನೀಡಿರುವ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಾಯ್ದೆ 336(3), 336(4), 340(2)ರಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಧಿಕೃತ ಸಂಖ್ಯೆ/ದಿನಾಂಕವಿರದ ಟಿಪ್ಪಣಿ ವೈರಲ್ ಆಗಿದ್ದು, ಮುಖ್ಯಮಂತ್ರಿಗಳ ಸಚಿವಾಲಯದ ಇ-ತಂತ್ರಾಶದಲ್ಲಿ ನೋಂದಣಿಯಾಗಿಲ್ಲ. ಟಿಪ್ಪಣಿ ಆಧಾರದಲ್ಲಿ ವರ್ಗಾವಣೆ ಆದೇಶವಾಗಿಲ್ಲ. ಆದರೂ ಮುಖ್ಯಮಂತ್ರಿಗಳು ಹಾಗೂ ಸರಕಾರಕ್ಕೆ ಕೆಟ್ಟ ಹೆಸರು ತರಲು ಇಂತಹ ಕೃತ್ಯ ಎಸಗಲಾಗಿದೆ. ಆದ್ದರಿಂದ ನಕಲಿ ಟಿಪ್ಪಣಿ ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರುಣ್ ಫುರ್ಟಾಡೋ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಮುಖ್ಯಮಂತ್ರಿಗಳ ಕಚೇರಿಯ ಹೆಸರಿನ ವರ್ಗಾವಣೆ ಟಿಪ್ಪಣಿ – ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.








