ಮೈಸೂರು: ಮೂರು ತಲೆಮಾರುಗಳಿಂದ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ರೈತನಿಗೆ ಒಕ್ಕಲೆಬ್ಬಿಸುವ ಸಂಬಂಧ ಅರಣ್ಯ ಇಲಾಖೆ ನೋಟಿಸ್ ನೀಡಿರುವ ಸಂಬಂಧ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತ ಗಿರಿಗೌಡ (65) ಎಂದು ಗುರುತಿಸಲಾಗಿದೆ.
ಗಿರಿಗೌಡ ಅವರು ಮೂರು ತಲೆಮಾರುಗಳಿಂದ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದರು. ಆದರೆ, ಇದು ಅರಣ್ಯದ ಜಾಗವಾಗಿದ್ದು, ತೆರವು ಮಾಡಬೇಕು ಎಂದು ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಗಿರಿಗೌಡ ಅವರು ನಾಲ್ಕು ದಿನಗಳ ಹಿಂದೆ ವಿಷ ಸೇವನೆ ಮಾಡಿದ್ದರು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕಣಿಯನಹುಂಡಿ ಗ್ರಾಮದ ಸರ್ವೇ ನಂ. 156, 132, 115, 8ರಲ್ಲಿ 5 ಎಕರೆ ಜಮೀನನ್ನು ಗಿರಿಗೌಡ ಹೊಂದಿದ್ದರು. ಸಾಗುವಳಿಗಾಗಿ 1997ರಲ್ಲೇ ಅರ್ಜಿಯನ್ನು ಸಲ್ಲಿಸಿದ್ದರು. ಸಾಗುವಳಿ ಮಂಜೂರಾತಿ ಆಗದ ಹಿನ್ನೆಲೆಯಲ್ಲಿ ಕೃಷಿ ಕಾರ್ಯವನ್ನು ಮುಂದುವರಿಸಿದ್ದರು. ಕಣಿಯನಹುಂಡಿ ವ್ಯಾಪ್ತಿಯಲ್ಲಿ ಒಂದು ಸಾವಿರ ಎಕರೆ ಪ್ರದೇಶವನ್ನು ಮೀಸಲು ಅರಣ್ಯವನ್ನಾಗಿ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಅರಣ್ಯ ಇಲಾಖೆಯ ಈ ಕ್ರಮಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷಿ ಭೂಮಿಯನ್ನು ಕಸಿದುಕೊಳ್ಳದಂತೆ ರೈತರು ಆಗ್ರಹಿಸಿದ್ದಾರೆ.