




ವಿಟ್ಲ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕ್ಅಪ್ ವಾಹನವನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಮೇ 18ರ ರಾತ್ರಿ, ವಿಟ್ಲ ಕುಡ್ತಮುಗೇರು ಪ್ರದೇಶದ ಹೊಳೆಯಿಂದ ಪಿಕ್ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು ಅವರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಲಾಯಿತು.
ಈ ವೇಳೆ ವಾಹನದಲ್ಲಿ ಮರಳು ಲೋಡ್ ಮಾಡಿರುವುದು ಪತ್ತೆಯಾಯಿತು. ವಾಹನದ ಚಾಲಕ ಬಂಟ್ವಾಳದ ಕೊಳ್ನಾಡು ನಿವಾಸಿ ರೆನೋಲ್ ಮೆಲ್ರೋಯ್ ಡಿಸೋಜ (31) ಅವರನ್ನು ವಿಚಾರಿಸಿದಾಗ, ಯಾವುದೇ ಪರವಾನಿಗೆ ಅಥವಾ ದಾಖಲಾತಿಗಳಿಲ್ಲದೇ ಮರಳು ಸಾಗಾಟ ನಡೆಸುತ್ತಿರುವುದಾಗಿ ತಿಳಿದುಬಂದಿದೆ.
ಪೊಲೀಸರು ಮುಂದಿನ ಕಾನೂನು ಕ್ರಮಕ್ಕಾಗಿ ಪಿಕ್ಅಪ್ ವಾಹನವನ್ನು ಮರಳಿನ ಸಮೇತ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.113/2026ರಡಿ 303(2) ಬಿಎನ್ಎಸ್ 2023, 4(1), 4(1A), 21 ಎಂಎಂಡಿಆರ್ ಕಾಯ್ದೆ 1957 ಹಾಗೂ ಕರ್ನಾಟಕ ಮೈನರ್ ಮಿನರಲ್ ಕನ್ಸೆಷನ್ ರೂಲ್ಸ್ 1994ರ 3 ಮತ್ತು 44ನೇ ನಿಯಮಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.








