ಬಾಗೇಪಲ್ಲಿ: ತನ್ನ ಜಮೀನಿನ ಕನಕಾಂಬರಿ ಹೂವಿನ ತೋಟದ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿರುವ ಘಟನೆ ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಂಧಿತ ವ್ಯಕ್ತಿಯನ್ನು ತಾಲ್ಲೂಕಿನ ರಾಶ್ಚೇರುವು ಗ್ರಾಮ ಪಂಚಾಯಿತಿಯ ದೇವರಮಾಕಲಪಲ್ಲಿ ಗ್ರಾಮದ ವೆಂಕಟೇಶಪ್ಪ (45) ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿ ಮೇರೆಗೆ ವೆಂಕಟೇಶಪ್ಪ ಎಂಬುವವರು ತನ್ನ ಜಮೀನಿನಲ್ಲಿ ಕನಕಾಂಬರಿ ಗಿಡಗಳ ತೋಟದ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿರುವುದಾಗಿ ಪೊಲೀಸರಿಗೆ ಮಾಹಿತಿ ಬಂದಿದೆ. ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಬೆಳೆದಿದ್ದ 19 ಕೆ.ಜಿ. 800 ಗ್ರಾಂ ನಷ್ಟು ತೂಕದ 12 ಗಾಂಜಾ ಗಿಡಗಳನ್ನು ಜಪ್ತಿ ಮಾಡಿ ವೆಂಕಟೇಶಪ್ಪನನ್ನು ಬಂಧಿಸಿದ್ದಾರೆ. ಇದರ ಮೌಲ್ಯ ಸುಮಾರು 3 ಲಕ್ಷ ರೂ. ಇರಬಹುದೆಂದು ಅಂದಾಜಿಸಲಾಗಿದೆ.
ಆರೋಪಿ ವೆಂಕಟೇಶಪ್ಪ ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯುವ ಕೆಲಸಕ್ಕೆ ಮುಂದಾಗಿದ್ದ ಎನ್ನಲಾಗಿದೆ. ನಂತರ ಗಾಂಜಾ ವ್ಯಸನಿಗಳಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಡಿವೈಎಸ್ಪಿ ರವಿಶಂಕರ್ ಮಾರ್ಗದರ್ಶನದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ನಯಾಜ್ ಬೇಗ್ ಅವರ ಮಾರ್ಗದರ್ಶನದಲ್ಲಿ ಆರಕ್ಷಕ ಉಪ ನಿರೀಕ್ಷಕರಾದ ರತ್ನಯ್ಯ,ಜಿ.ಕೆ.ಸುನೀಲ್ ಕುಮಾರ್ ಮತ್ತು ಸಿಬ್ಬಂದಿಗಳು ದಾಳಿಯಲ್ಲಿ ಭಾಗವಹಿಸಿದ್ದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ:ಸಿ.ಎನ್.ಸತ್ಯನಾರಾಯಣರೆಡ್ಡಿ ಹಾಜರಿದ್ದರು. ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಎನ್ ಡಿ ಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.