




ಹೊಸವರ್ಷ ಆಗಮನದ ಸಂತಸದ ಮಧ್ಯೆಯೇ ಜನವರಿ 1ರ ಮುಂಜಾನೆ ಶಿಕ್ಷಣ ತಜ್ಞ ವಿನಯ್ ಹೆಗ್ಡೆ ನಿಧನದ ಸುದ್ದಿ ಆಘಾತವನ್ನುಂಟು ಮಾಡಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಎಸ್.ಹೆಗ್ಡೆ ಅವರ ದ್ವಿತೀಯ ಪುತ್ರರಾದ ವಿನಯ್ ಹೆಗ್ಡೆ ಅವರು ಕರಾವಳಿ ಭಾಗದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಮೂಲಕ ಸಾವಿರಾರು ವಿದ್ಯಾರ್ಥಿಗಳ ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತನೆ ಮಾಡಿದ ಕೀರ್ತಿ ವಿನಯ್ ಹೆಗ್ಡೆಯವರಿಗೆ ಸಲ್ಲುತ್ತಿದೆ.
ಶಿಕ್ಷಣ ಮಾತ್ರವಲ್ಲದೇ, ಆರೋಗ್ಯ ಕ್ಷೇತ್ರದಲ್ಲಿಯೂ ಅಪೂರ್ವ ಸಾಧನೆಗೈದು, ಧಾರ್ಮಿಕ, ಸಾಮಾಜಿಕ ಸೇವೆಗಳ ಮೂಲಕ ಹೆಗ್ಡೆಯವರು ಅಪಾರ ಖ್ಯಾತಿ ಪಡೆದಿದ್ದರು. ಇವರ ಸೇವೆಯನ್ನು ಪರಿಗಣಿಸಿ ಅನೇಕ ಪ್ರಶಸ್ತಿ, ಗೌರವಗಳು ಸಂದಿವೆ. ವಿನಯ್ ಹೆಗ್ಡೆ ಅವರ ನಿಧನಕ್ಕೆ ಗಣ್ಯರು, ಶಿಕ್ಷಣ ಪ್ರೇಮಿಗಳು ಹಾಗೂ ರಾಜ್ಯದಾದ್ಯಂತ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಬೆಳಗ್ಗೆ 8-30ರಿಂದ ಸಂಜೆ 3ಗಂಟೆ ವರೆಗೆ ಮಂಗಳೂರು ಶಿವಭಾಗ್ ನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.








