ಬಸ್ ಹಾಗೂ ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಗದಗದ ನೆರೇಗಲ್ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ.
ಟಾಟಾ ಸುಮೋದಲ್ಲಿ ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕಿರೇಶ್ವರ ಮಠಕ್ಕೆ ತೆರಳುತ್ತಿದ್ದರು. ಈ ವೇಳೆ ಗದಗದಿಂದ ಗಜೇಂದ್ರಗಡಕ್ಕೆ ಹೊರಟಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಟಾಟಾ ಸುಮೋದಲ್ಲಿದ್ದ ಐವರು ಸಾವಿಗೀಡಾಗಿದ್ದಾರೆ. ಮೃತರನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಿ ನಿವಾಸಿಗಳು ಎಂದು ತಿಳಿದು ಬಂದಿದೆ. ಗಾಯಗೊಂಡ ಮಕ್ಕಳನ್ನು ಮಹೇಶ್, ದಿಂಗಾಲೇಶ್ವರ, ಪ್ರಭುದೇವ್ ಹಾಗೂ ಅನುಶ್ರೀ ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟಾ ಸುಮೋ ಚಾಲಕನ ಅತಿ ವೇಗದಿಂದ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಅಪಘಾತದ ವೇಳೆ ಬಸ್ ಚಾಲಕ ಆದಷ್ಟು ಅಪಘಾತವನ್ನು ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಟಾಟಾ ಸುಮೋ ಚಾಲಕನಿಗೆ ವಾಹನ ನಿಯಂತ್ರಿಸಲಾಗಿಲ್ಲ ಎಂದು ತಿಳಿದು ಬಂದಿದೆ. ಬಸ್ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ನೆರೇಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.