ಬಂಟ್ವಾಳ(ನ.11): ಮಾಜಿ ಸಚಿವ ರಮಾನಾಥ ರೈ ವಿರುದ್ಧ ಆಧಾರ ರಹಿತ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ ಈಗ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಈ ಹೇಳಿಕೆ ವಿರುದ್ಧ ಕೈ ನಾಯಕರು ಪೊಲೀಸರಿಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.
ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರ ಪೊಲೀಸ್ ಠಾಣೆ ಎಸೈ ಅವಿನಾಶ್ ಗೌಡ ಅವರಿಗೆ ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ವಿರುದ್ಧ ದೂರು ಸಲ್ಲಿಸಿದರು.
ಇರ್ವತ್ತೂರು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಮನೆಯಲ್ಲಿ ನಡೆದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶರತ್ ಮಡಿವಾಳ್ ಹತ್ಯೆ ಮಾಡಿಸಿದ್ದಾರೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಆರೋಪಿಸಿದ್ದರು. ಮಾತ್ರವಲ್ಲದೆ ಈ ಬಗ್ಗೆ ವೀಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಶಾಸಕ ರಾಜೇಶ ನಾಯ್ಕ್ ಉಪಸ್ಥಿತಿಯಲ್ಲಿ ಅಂದು ಇಂತಹ ಅನಾಗರಿಕ ಮತ್ತು ಕೋಮು ಸಂಘರ್ಷ ಕೆರಳಿಸುವ ಹೇಳಿಕೆ ನೀಡಿರುವ ಅವರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡ ಬೇಬಿ ಕುಂದರ್ ಆಗ್ರಹಿಸಿದ್ದಾರೆ.
ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರ ಪೊಲೀಸ್ ಠಾಣೆಗೆ ನೂರಾರು ಮಂದಿ ಮಂಗಳವಾರ ಭೇಟಿ ನೀಡಿ ದೂರು ಸಲ್ಲಿಸಿದರು. ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಉಪಾಧ್ಯಕ್ಷೆ ಜೆಸಿಂತಾ, ಪ್ರಮುಖರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ್ ಜೈನ್, ಸುದೀಪ್ ಕುಮಾರ್ ಶೆಟ್ಟಿ, ಕೆ.ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಆಲಿ, ಕೆ.ಪದ್ಮನಾಭ ರೈ, ಸುದರ್ಶನ್ ಜೈನ್, ಲುಕ್ಮಾನ್ ಕೈಕಂಬ, ಚಿತ್ತರಂಜನ್ ಶೆಟ್ಟಿ, ಸಂಪತ್ ಕುಮಾರ್ ರೈ, ಪಿ.ಜಿನರಾಜ ಅರಿಗ, ಪ್ರಶಾಂತ್ ಕುಲಾಲ್, ಮಲ್ಲಿಕಾ ವಿ.ಶೆಟ್ಟಿ, ಜಯಂತಿ ಪೂಜಾರಿ, ಜೋಸ್ಫಿನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.