


ಹಾಸನ: ಬಾಣಂತಿ ಮಹಿಳೆ ಸಾವನ್ನಪ್ಪಿರುವ ದುರಂತ ಘಟನೆ ಹಾಸನದ ಹಿಮ್ಸ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃತಿ(30) ಮೃತಪಟ್ಟ ಬಾಣಂತಿ ಮಹಿಳೆ.
ಹನುಮನಹಳ್ಳಿ ನಿವಾಸಿ, ಮತ್ತು ಅತಿಥಿ ಶಿಕ್ಷಕಿಯೂ ಆಗಿದ್ದ ಶೃತಿ ಅವರು ಹೆರಿಗೆಗಾಗಿ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಮಧ್ಯಾಹ್ನ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಆರೋಗ್ಯ ಕ್ಷೀಣಿಸಿತು. ಭಾನುವಾರವಾದ್ದರಿಂದ ತಜ್ಞ ವೈದ್ಯರು ಲಭ್ಯವಿರದೆ, ಚಿಕಿತ್ಸೆ ವಿಳಂಬವಾಯಿತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ವೈದ್ಯರು ಮೊದಲು ಶೃತಿ ಆರೋಗ್ಯವಾಗಿದ್ದಾರೆ ಎಂದು ತಿಳಿಸಿ, ನಂತರ ದಿಢೀರನೆ ಸ್ಥಿತಿ ಗಂಭೀರವಾಗಿದೆ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಶೃತಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಹಾಸನ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಮುಂದುವರೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ವರದಿಯಿಂದ ತಿಳಿದುಬಂದಿದೆ.








