ಉತ್ತರ ಪ್ರದೇಶ: ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದ್ದ ಉತ್ತರ ಪ್ರದೇಶದ ಹತ್ರಾಸ್ನಲ್ಲಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೇಲ್ವಿಚಾರಣೆ ಅಲಹಾಬಾದ್ ಹೈಕೋರ್ಟ್ನ ಲಕ್ನೋ ನ್ಯಾಯಪೀಠ ನಡೆಸುತ್ತಿದೆ.
ಸಂತ್ರಸ್ತ ಕುಟುಂಬಕ್ಕೆ ನ್ಯಾಯಾಲಯದಲ್ಲೇ ಬೆದರಿಕೆ ಹಿನ್ನೆಲೆ, ಸದ್ಯ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಯುಪಿ ಜಿಲ್ಲೆಯಿಂದ ಸ್ಥಳಾಂತರಿಸುವ ಬಗ್ಗೆ ಯೋಚಿಸುವುದಾಗಿ ನ್ಯಾಯಪೀಠ ಹೇಳಿದೆ.
ಈ ತಿಂಗಳ ಆರಂಭದಲ್ಲಿ ಹತ್ರಾಸ್ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವೇಳೆ ಕುಟುಂಬ ಮತ್ತು ಅವರ ವಕೀಲರಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ಸಹೋದರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಬೇರೆಡೆಗೆ ಸ್ಥಳಾಂತರಿಸುವ ಕುರಿತು ಕ್ರಮ ಕೈಗೊಳ್ಳುವುದಾಗಿ ನ್ಯಾಯಾಲಯ ತಿಳಿಸಿದೆ.
ಅಲಹಾಬಾದ್ ಹೈಕೋರ್ಟ್ನ ಮುಂದೆ ನೀಡಿದ ಅಫಿಡವಿಟ್ನಲ್ಲಿ, ಮಾರ್ಚ್ 5 ರಂದು ಹತ್ರಾಸ್ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವೇಳೆ ಈ ಘಟನೆ ನಡೆದಿದೆ ಎಂದು ಸಂತ್ರಸ್ತೆಯ ಸಹೋದರ ಆರೋಪಿಸಿದ್ದಾರೆ.