ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.
ದಕ್ಷಿಣಭಾರತದಲ್ಲಿ ಸಾಮಾನ್ಯವಾಗಿ ಇದನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ಗಾಯ ಅಥವಾ ಚೇಳು ಕಡಿತವಾದಾಗ ಪ್ರಥಮ ಚಿಕಿತ್ಸೆಯಾಗಿ ಇದರ ಎಲೆಗಳನ್ನು ಜಜ್ಜಿ ಬಳಸಲಾಗುತ್ತದೆ. ದಕ್ಷಿಣ ಕರ್ನಾಟಕದಲ್ಲಿ ದೊಡ್ಡಪತ್ರೆಯ ಚಟ್ನಿ, ತಂಬುಳಿ ಮಾಡಲಾಗುತ್ತದೆ.
ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ. ಚಿಕ್ಕ ಮಕ್ಕಳಿಗೂ ಕೂಡ ಈ ದೊಡ್ಡ ಪತ್ರೆ ಸೊಪ್ಪನ್ನು ಔಷಧವಾಗಿ ಬಳಸುತ್ತಾರೆ. ದೊಡ್ಡ ಪತ್ರೆ ಸೊಪ್ಪನ್ನು ಕೊಯ್ದು ತಂದು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ. ಈ ಎಲೆಯನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಉತ್ತಮ ಔಷಧವಾಗಿದೆ.