


ಮಂಗಳೂರು: ಮಂಗಳೂರು ಉತ್ತರ ಪೊಲೀಸ್ ಠಾಣೆ ಅಪರಾಧ ಕ್ರ.ಸಂ. 32/2015 ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಒಂಗೋಲ್ ಮೂಲದ, ಪ್ರಸ್ತುತ ನೆಲ್ಲೂರು ಜಿಲ್ಲೆಯಲ್ಲಿ ವಾಸಿಸುತ್ತಿದ್ದ ಲಕ್ಕು ಆಂಡಾ ರೆಡ್ಡಿ (46) ಎಂದು ಗುರುತಿಸಲಾಗಿದೆ.
ಈತನ ವಿರುದ್ಧ Maithri Plantation and Horticulture Pvt Ltd ಎಂಬ ಸಂಸ್ಥೆಯ ಹೆಸರಿನಲ್ಲಿ ಹೆಚ್ಚಿನ ಬಡ್ಡಿ ನೀಡುವುದಾಗಿ ಸಾರ್ವಜನಿಕರಿಂದ ಹಣ ಡೆಪಾಸಿಟ್ ಮಾಡಿಸಿಕೊಂಡು ಮೋಸ ಹಾಗೂ ವಂಚನೆ ಮಾಡಿದ ಆರೋಪವಿದೆ. ಈ ಸಂಬಂಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ IPC ಕಲಂ 415, 417, 418, 419, 420, 421, 422, 406, 409, 120(B) ಜೊತೆಗೆ 149 ಅಡಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆ ವೇಳೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದರಿಂದ ನ್ಯಾಯಾಲಯವು ವಾರಂಟ್ ಜಾರಿ ಮಾಡಿತ್ತು.ಇದೀಗ ಮಾರ್ಚ್ 5, 2026 ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯ PSI ನೇತೃತ್ವದ ತಂಡವು ಆಂಧ್ರಪ್ರದೇಶದ ನೆಲ್ಲೂರು ನಗರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ, ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಆರೋಪಿಯ ವಿರುದ್ಧ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ತುಮಕೂರು, ಉಡುಪಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಮೋಸ ಪ್ರಕರಣಗಳು ದಾಖಲಾಗಿವೆ. ಇದೇ ರೀತಿ ಆಂಧ್ರಪ್ರದೇಶದ ವಿವಿಧ ಠಾಣೆಗಳಲ್ಲಿ ಸಹ ಈತನ ವಿರುದ್ಧ ವಂಚನೆ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.








