ಬೆಂಗಳೂರು: ಇಂದು ಹಿಂದಿ ದಿವಸ್. ಹಿಂದಿ ಹೇರಿಕೆ ಕುರಿತಂತೆ ಇದಾಗಲೇ ಕೆಲವರು ಪ್ರತಿಭಟನೆಗೆ ಇಳಿದಿದ್ದಾರೆ. ಅದೇ ರೀತಿ ಇವತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೂ ಹಿಂದಿ ದಿವಸ್ ಹಾಗೂ ಹಿಂದಿ ಹೇರಿಕೆ ವಿರುದ್ಧ ಸರಣಿ ಟ್ವೀಟ್ ಮಾಡಿದ್ದಾರೆ.
ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು.
ನವೆಂಬರ್ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು ಎಂದು ಹೇಳಿದ್ದಾರೆ. ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿನ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದಿದ್ದಾರೆ.
ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು.
ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ ಅವರು ಈ ದಿನದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.