



ಲಕ್ನೋ: ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ ಅವರು ಗುರುವಾರ ಮುಂಜಾನೆ ನಿಧನರಾದರು.
89 ವಯಸ್ಸಿನ ಮಿಶ್ರಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ ತಮ್ಮ ಮಗಳ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಿಶ್ರಾ ಅವರು ಮಗ ಹಾಗೂ ತಬಲಾ ವಾದಕ ರಾಮಕುಮಾರ್ ಮಿಶ್ರಾ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ವಯೋಸಹಜ ಕಾಯಿಲೆಯಿಂದಾಗಿ ಕಳೆದ 17-18 ದಿನಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ನಸುಕಿನ 4 ಗಂಟೆ ಸುಮಾರಿಗೆ ಅವರು ಮನೆಯಲ್ಲಿ ನಿಧನರಾದರು ಎಂದು ಪುತ್ರಿ ನಮ್ರತಾ ಮಿಶ್ರಾ ತಿಳಿಸಿದ್ದಾರೆ. ಮಿಶ್ರಾ ಅವರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ವಾರಣಾಸಿಯಲ್ಲಿ ನಡೆಯಲಿದೆ.
ಮಿಶ್ರಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ‘ಹೆಸರಾಂತ ಶಾಸ್ತ್ರೀಯ ಗಾಯಕ ಪಂಡಿತ್ ಚನ್ನುಲಾಲ್ ಮಿಶ್ರಾ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಭಾರತೀಯ ಕಲೆ ಮತ್ತು ಸಂಸ್ಕೃತಿಯ ಪುಷ್ಟೀಕರಣಕ್ಕೆ ಸಮರ್ಪಿತರಾಗಿದ್ದರು. ಶಾಸ್ತ್ರೀಯ ಸಂಗೀತವನ್ನು ಜನಸಾಮಾನ್ಯರಿಗೆ ತಲುಪಿಸುವುದರ ಜೊತೆಗೆ, ಜಾಗತಿಕ ವೇದಿಕೆಯಲ್ಲಿ ಭಾರತೀಯ ಸಂಪ್ರದಾಯವನ್ನು ಸ್ಥಾಪಿಸಲು ಅವರು ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ಮೋದಿ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಶಾಸ್ತ್ರೀಯ ಗಾಯಕನಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಿಶ್ರಾ ಅವರಿಗೆ 2010ರ ಜನವರಿ 25 ರಂದು ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು. 2020 ರಲ್ಲಿ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿ ನೀಡಲಾಯಿತು.








