





ಮಂಗಳೂರು, ಮಾ.18: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ, ಸುಮಾರು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ದಿನಾಂಕ 18-03-2026 ರಂದು ಬೆಳಿಗ್ಗೆ ಸುಮಾರು 4:45 ಗಂಟೆಗೆ ಮಂಗಳೂರು ತಾಲೂಕು ಬಡಗ ಎಡಪದವು ಗ್ರಾಮದ ಸಸ್ತಾವು ಪ್ರದೇಶದಲ್ಲಿ ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಫಾರ್ಚೂನರ್ ಕಾರು (DL 10 CE 6227)ಯಲ್ಲಿ ನಾಲ್ಕು ದನಗಳ ಕಾಲುಗಳನ್ನು ಕಟ್ಟಿ ಹಿಂಸಾತ್ಮಕವಾಗಿ ತುಂಬಿಕೊಂಡು ಮಾರಾಟಕ್ಕಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಎಸಿಪಿ ಶ್ರೀಕಾಂತ್ ಅವರ ಮಾರ್ಗದರ್ಶನದಲ್ಲಿ, ಪಿ.ಐ ಬಾಲಕೃಷ್ಣ ನೇತೃತ್ವದಲ್ಲಿ, ಪಿ.ಎಸ್.ಐ ಲತಾ ಹಾಗೂ ಸಿಬ್ಬಂದಿಗಳಾದ ರಾಜೇಶ್, ಚಿದಾನಂದ ಮತ್ತು ಪ್ರಕಾಶ್ ತಂಡ ಕಾರ್ಯಾಚರಣೆ ನಡೆಸಿತು. ದಾಳಿ ವೇಳೆ ಆರೋಪಿಗಳು ಕಾರು ಮತ್ತು ಜಾನುವಾರುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.
ಪೊಲೀಸರು ನಾಲ್ಕು ದನಗಳು, ಫಾರ್ಚೂನರ್ ಕಾರು, ಒಂದು ತಲವಾರ್ ಹಾಗೂ ಒಂದು ಕಬ್ಬಿಣದ ರಾಡ್ ವಶಪಡಿಸಿಕೊಂಡಿದ್ದು, ಒಟ್ಟು ₹8.42 ಲಕ್ಷ ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಿದ್ದಾರೆ.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ, ಪ್ರಾಣಿಗಳ ಮೇಲೆ ಕ್ರೌರ್ಯ ತಡೆ ಕಾಯ್ದೆ 1960, ಮೋಟಾರು ವಾಹನ ಕಾಯ್ದೆ 1988 ಹಾಗೂ ಆಯುಧ ಕಾಯ್ದೆ 1959 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.








