ನವದೆಹಲಿ(ನ.15): ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ನಾಗರೀಕರು ಹಾಗೂ ಯೋಧರ ಜೀವ ತೆಗೆದ ಘಟನೆಗೆ ಸಂಬಂಧಿಸಿದಂತೆ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿರುವ ಭಾರತ ಪಾಕಿಸ್ತಾನದ ದುರ್ವರ್ತನೆ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ.
ಪಾಕಿಸ್ತಾನದ ಪಡೆಗಳು ಮುಗ್ಧ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ಭಾರತವು ತೀವ್ರವಾಗಿ ಖಂಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆ ನವೆಂಬರ್ 13ರಂದು ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ನಾಲ್ವರು ನಾಗರೀಕರು ಸಾವನ್ನಪ್ಪುವಂತೆ ಮಾಡಿದ್ದಾರೆ.
ಅಲ್ಲದೆ 19 ಮಂದಿ ಗಾಂಭೀರವಾಗಿ ಗಾಯಗೊಂಡಿದ್ದಾರೆ. ಪಾಕಿಸ್ತಾನ ದುರ್ವರ್ತನೆಗೆ ಸಂಬಂಧಿಸಿದಂತೆ ಪಾಕಿಸ್ತಾನ ರಾಯಭಾರಿ ಅಧಿಕಾರಿಗೆ ಸಮನ್ಸ ಜಾರಿಗೊಳಿಸಲಾಗಿದ್ದು ತೀವ್ರ ಪ್ರತಿಭಟನೆ ವ್ಯಕ್ತಪಡಿಸಲಾಗಿದೆ. ಎಂದು ಸಚಿವಾಲಯ ಹೇಳಿದೆ.
ಹಬ್ಬ ಸಂದರ್ಭವನ್ನೇ ಬಳಸಿಕೊಂಡು ಗಡಿಯುದ್ದಕ್ಕೂ ಮುಗ್ಧ ನಾಗರೀಕರ ಮೇಲೆ ಶಸ್ತ್ರಾಸ್ತ್ರಗಳು ಹಾಗೂ ಶೆಲ್ ಗಳ ಮೂಲಕ ದಾಳಿ ನಡೆಸಿ ಜಮ್ಮು ಮತ್ತು ಕಾಶ್ಮೀರದ ಶಾಂತಿ ಕದಡಲು ಹಾಗೂ ಹಿಂಸಾಚಾರ ಸೃಷ್ಟಿಸಲು ಪಾಕಿಸ್ತಾನ ಪ್ರಯತ್ನ ನಡೆಸಿರುವುದು ನಿಜಕ್ಕೂ ಶೋಚನೀಯ ಸಂಗತಿಯಾಗಿದೆ ಎಂದು ತಿಳಿಸಿದೆ.
ಈ ದಾಳಿಗೆ ಪ್ರತೀಕಾರವಾಗಿ ದಾಳಿ ನಡೆಸಿದ್ದ ಭಾರತವು ಪಾಕ್ ಸೇನೆಯ 11 ಸೈನಿಕರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.