
ಹೊಸದಿಲ್ಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಬುಧವಾರ ಕೇಂದ್ರ ಸರಕಾರ, ಫೆ.28ರಿಂದ ಈ ವಲಯದಿಂದ ಸುಮಾರು 2.6 ಲಕ್ಷ ಜನರು ಭಾರತಕ್ಕೆ ಹಿಂದಿರುಗಿದ್ದಾರೆ ಎಂದು ಹೇಳಿದೆ.

ಇಲ್ಲಿ ಪಶ್ಚಿಮ ಏಷ್ಯಾದ ಪರಿಸ್ಥಿತಿ ಕುರಿತು ಸಚಿವಾಲಯಗಳ ಮಟ್ಟದಲ್ಲಿ ಸಮಾಲೋಚನೆ ನಡೆಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ (ಗಲ್ಫ್) ಅಸೀಮ್ ಆರ್. ಮಹಾಜನ್, ಯುಎಇಯ ವಿವಿಧ ವಿಮಾನ ನಿಲ್ದಾಣಗಳಿಂದ ಭಾರತದ ವಿವಿಧ ಸ್ಥಳಗಳಿಗೆ ಸುಮಾರು 70 ವಿಮಾನಗಳು ಕಾರ್ಯನಿರ್ವಹಿಸುವ ನಿರೀಕ್ಷೆ ಇತ್ತು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಎಇ ಅಧ್ಯಕ್ಷ ಶೇಖ್ ಮುಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ನಡುವಿನ ದೂರವಾಣಿ ಸಂಭಾಷಣೆಯ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ ಎಂದು ಹೇಳಿದರು.“ಇಬ್ಬರು ನಾಯಕರು ಪಶ್ಚಿಮ ಏಷ್ಯಾದ ಪ್ರಸಕ್ತ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಮಾಯಕ ಜನರ ಸಾವಿಗೆ ಹಾಗೂ ಮೂಲಭೂತ ಸೌಲಭ್ಯಗಳಿಗೆ ಹಾನಿ ಉಂಟಾಗಲು ಕಾರಣವಾದ ಯುಎಇ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸುವುದಾಗಿ ಪ್ರಧಾನಿ ಪುನರುಚ್ಚರಿಸಿರುವುದಾಗಿ ಅವರು ಹೇಳಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಹಾಗೂ ಮುಕ್ತ ಸಂಚಾರದ ಖಾತರಿಯ ಪ್ರಾಮುಖ್ಯತೆಯನ್ನು ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ. ಈ ವಲಯದಲ್ಲಿ ಶಾಂತಿ, ಸುರಕ್ಷತೆ ಹಾಗೂ ಸ್ಥಿರತೆಯನ್ನು ಶೀಘ್ರದಲ್ಲಿ ಮರು ಸ್ಥಾಪಿಸಲು ಇಬ್ಬರೂ ನಾಯಕರು ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಜೈಸ್ವಾಲ್ ತಿಳಿಸಿದ್ದಾರೆ.ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಫೆಬ್ರವರಿ 28ರಂದು ಇರಾನ್ ಮೇಲೆ ದಾಳಿ ನಡೆಸಿದ ಬಳಿಕ ನರೇಂದ್ರ ಮೋದಿ ಅವರು ಯುಎಇ ಅಧ್ಯಕ್ಷರೊಂದಿಗೆ ಮಾತನಾಡುತ್ತಿರುವುದು ಇದು ಎರಡನೇ ಬಾರಿ.











