


ಪುತ್ತೂರು : ಕೆ ಎಸ್ ಆರ್ ಟಿ ಸಿ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಮಾಡನ್ನೂರು ಗ್ರಾಮದ ಕುಡ್ತಿನಡ್ಕ ಎಂಬಲ್ಲಿ ನಡೆದಿದೆ.
ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ ಪರಮೇಶ್ವರ (75) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿಯೊಂದಿಗೆ ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುವ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಕುಡ್ತಿನಡ್ಕ ಎಂಬಲ್ಲಿ ಬಸ್ಸಿನ ನಿರ್ವಾಹಕ ಹಿಂಬದಿ ಬಾಗಿಲನ್ನು ಹಾಕದೆ ಇದ್ದ ಪರಿಣಾಮ ಹಾಗೂ ಚಾಲಕ ತಿರುವಿನಲ್ಲಿ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಚಾಲನೆ ಮಾಡಿದ ಕಾರಣ ಈ ಅವಘಡ ಸಂಭವಿಸಿದೆ ಎಂದು ದೂರಲಾಗಿದೆ.
ಬಸ್ಸಿನ ಹಿಂದಿನ ಬಾಗಿಲ ಮೂಲಕ ಹೊರಗೆಸೆಯಲ್ಪಟ್ಟ ಪರಮೇಶ್ವರ ಅವರು ರಸ್ತೆ ಬದಿಯ ಚರಂಡಿಗೆ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಅವರ ಪತ್ನಿ ದೇವಕಿ ಅವರು ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








