ಕಡಬ: ಕಡಬ ತಾಲೂಕಿನ ಹಿಂದುಳಿದ ಪ್ರದೇಶ ಸಿರಿಬಾಗಿಲು,ಕೊಂಬಾರು ಗ್ರಾಮದಲ್ಲಿ ಜ.31ರಂದು ನಡೆಯುವ ದ.ಕ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ವಿವಿಧ ಇಲಾಖಾ ಸಚಿವರುಗಳು,ರಾಜ್ಯ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಭಾಗವಹಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಪರಿಹಾರ ಕಲ್ಪಿಸಲಿದ್ದಾರೆ ಎಂದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಇಂದಾಜೆಯವರು ಹೇಳಿದರು.
ಕೊಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪತ್ರಕರ್ತರ ಗ್ರಾಮವಾಸ್ತವ್ಯದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಇಂದಾಜೆಯವರು 2018 ಡಿಸೆಂಬರ್ 23ರಂದು ಬೆಳ್ತಂಗಡಿ ತಾಲೂಕಿನ ಕುತ್ಲೂರಿನಲ್ಲಿ ಪ್ರಥಮ ಬಾರಿಗೆ ಹಾಗೂ 2020 ಜನವರಿ 5ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಎರಡನೇ ಗ್ರಾಮವಾಸ್ತವ್ಯ ಕಾರ್ಯಕ್ರಮವು ಯಶಸ್ಸಿನಿಂದ ನಡೆದಿದೆ ಎಂದರು.
ಈ ಗ್ರಾಮಗಳ ಹಲವಾರು ಸಮಸ್ಯೆಗಳನ್ನು ಪರಿಹರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೀಗ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಮೂರನೇ ಗ್ರಾಮವಾಸ್ತವ್ಯ ಕಾರ್ಯಕ್ರಮ ಕಡಬ ತಾಲೂಕಿನ ಕೊಂಬಾರಿನಲ್ಲಿ ಜನವರಿ 31ರಂದು ನಡೆಯಲಿದ್ದು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ಈ ಕೊಂಬಾರು ಹಾಗೂ ಸಿರಿಬಾಗಿಲು ಗ್ರಾಮದ ಹಲವಾರು ಸಮಸ್ಯೆಗಳು ಈ ಸಮಯದಲ್ಲಿ ಪರಿಹರಿಸಿಕೊಳ್ಳಲು ಸಾರ್ವಜನಿಕರು ಸಹಕರಿಸಬೇಕೆಂದು ವಿನಂತಿ ಮಾಡಿದರು.
ಈ ಸಭೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಕಡಬ ತಾಲೂಕಿನ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಕೊಂಬಾರು, ಸಿರಿಬಾಗಿಲು ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.