ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಮುಂಜಾನೆಯಿಂದಲೇ ಮಳೆಯ ಆರ್ಭಟ ಹೆಚ್ಚಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ಬೀದರ್, ಯಾದಗಿರಿ, ಕಲಬುರ್ಗಿ, ವಿಜಯಪುರದಲ್ಲಿ ಮಳೆ ಹೆಚ್ಚಾಗಿದೆ.
ಸೆ. 19 ಮತ್ತು 20ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಕಲಬುರ್ಗಿ, ಬೀದರ್ನಲ್ಲಿ ಮಳೆ ತನ್ನ ಉಗ್ರರೂಪ ತೋರಿಸುತ್ತಿದೆ.
ಕೊಡಗಿನಲ್ಲಿಯೂ ಮಳೆಯ ಅಬ್ಬರ ಹೆಚ್ಚಾಗಿದೆ. ಮಡಿಕೇರಿ, ನಾಪೋಕ್ಲು, ಭಾಗಮಂಡಲ, ತಲಕಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆ ಕೊಂಚ ಬಿಡುವು ಪಡೆದಿದೆ. ಉತ್ತರ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದ್ದು, ಕಲಬುರ್ಗಿ, ಬೀದರ್ನ ನದಿಗಳು ಉಕ್ಕಿ ಹರಿಯುತ್ತಿವೆ.
ನೈಋತ್ಯ ಮಾನ್ಸೂನ್ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ನಿನ್ನೆ ಕರಾವಳಿಯಲ್ಲಿ ಮತ್ತು ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಮಲೆನಾಡಿನಲ್ಲಿ ಮಳೆ ಕೊಂಚ ಇಳಿಮುಖಗೊಂಡಿದೆ.
ಕರಾವಳಿಯಲ್ಲಿ 3 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.